ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಏ.೪ ರಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಪ್ರಿನ್ಸ್ಶೈನ್ ಅರಮನೆ ಆವರಣದಲ್ಲಿ ರಾಜ್ಯಮಟ್ಟದ ಕಾರ್ಯಾಗಾರ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎ. ಗೋಪಾಲಕೃಷ್ಣ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ ಜಾರಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ಇದೇ ವೇಳೆ ಅವರಿಗೆ ಅಭಿನಂದಿಸಲಾಗುವುದೆಂದು ಹೇಳಿದರು.
ಈ ಸಂಬಂಧ ಸಮಾವೇಶದ ಯಶಸ್ವಿಗಾಗಿ ಮಾ.೧೯ ರಂದು ಬುಧವಾರ ಬೆಳಗ್ಗೆ ೧೧ ಗಂಟೆಗೆ ಚಿಕ್ಕಮಗಳೂರಿನ ಸಂಘದ ಕಚೇರಿಯಲ್ಲಿ ಜಿಲ್ಲಾಮಟ್ಟದ ಸರ್ವಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸರ್ವ ಸದಸ್ಯರುಗಳು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸುವ ಮೂಲಕ ಸಲಹೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪ್ರಮುಖ ಬೇಡಿಕೆಗಳು: ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ನಗರದು ರಹಿತ ಆರೋಗ್ಯ ಭಾಗ್ಯ ಸಂಧ್ಯಾಕಿರಣ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ೭೦ ರಿಂದ ೮೦ ವರ್ಷದೊಳಗಿನ ನಿವೃತ್ತ ಸರ್ಕಾರಿ ನೌಕರರಿಗೆ ಶೇ.೧೦ ರಷ್ಟು ಮೂಲ ಪಿಂಚಣಿಯಲ್ಲಿ ಆರ್ಥಿಕ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.
೭ನೇ ವೇತನ ಆಯೋಗದ ವರದಿಯಂತೆ ೦೧-೦೭-೨೦೨೨ ರಿಂದ ನಿವೃತ್ತಿ ಹೊಂದಿದ ಸರ್ಕಾರಿ ನೌಕರರಿಗೆ ವೇತನ ನಗದೀಕರಣ ಬಿಟ್ಟು ಇತರೆ ಆರ್ಥಿಕ ಸೌಲಭ್ಯ ನೀಡಬೇಕು, ನಿವೃತ್ತ ನೌಕರರಿಗೆ ಅಂತ್ಯಸಂಸ್ಕಾರಕ್ಕಾಗಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಿಂದ ಈ ಸಮಾವೇಶಕ್ಕೆ ಸುಮಾರು ೫೦೦ ಕ್ಕೂ ಹೆಚ್ಚು ನಿವೃತ್ತ ನೌಕರರು ಭಾಗವಹಿಸಲಿದ್ದಾರೆಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಆರ್ ವಿರುಪಾಕ್ಷಪ್ಪ, ಕಾರ್ಯದರ್ಶಿ ಹೆಚ್.ಕೆ. ಕೃಷ್ಣಮೂರ್ತಿ, ಖಜಾಂಚಿ ಕಾಳಯ್ಯ, ರಾಜ್ಯ ಪರಿಷತ್ ಸದಸ್ಯ ಬಿ. ಶಿವಣ್ಣ ಉಪಸ್ಥಿತರಿದ್ದರು.
Mar. 19 State Government Retired Employees All-Members’ Meeting