ಚಿಕ್ಕಮಗಳೂರು: ಭಾರತ ದೇಶದಲ್ಲಿ ಕೆಲವು ಭಾಷೆಗಳು ಕಾರಣಾಂತರಗಳಿಂದ ನಶಿಸುತ್ತಿರುವ ಈ ಸಂದರ್ಭದಲ್ಲಿ ಮಾತೃಭಾಷೆ ಕನ್ನಡವನ್ನು ನಶಿಸದಂತೆ ಉಳಿಸಿ ಬೆಳೆಸುವ ಜವಾಬ್ದಾರಿ ಉಪನ್ಯಾಸಕರು ಮತ್ತು ಎಲ್ಲರ ಮೇಲಿದೆ ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಡಿ. ತಮ್ಮಯ್ಯ ಕರೆನೀಡಿದರು.
ಅವರು ಇಂದು ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಏರ್ಪಡಿಸಿದ್ದ ‘ಓ ನನ್ನ ಚೇತನ’ ಕನ್ನಡ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ದೇಶ ಸುತ್ತು ಕೋಶ ಓದು ಎಂಬ ಗಾದೆಯ ಕುರಿತು ವಿಶ್ಲೇಷಿಸಿದ ಶಾಸಕರು, ಮಾನವನ ಜೀವನದಲ್ಲಿ ಭಾಷೆ ಬಹಳ ಪ್ರಮುಖ ಸ್ಥಾನ ವಹಿಸುತ್ತದೆ. ಭಾರತದಲ್ಲಿ ಇರುವ ೩೦ ರಾಜ್ಯಗಳಲ್ಲಿ ಅವರದೇ ಆದ ಪ್ರಾದೇಶಿಕ ಭಾಷೆಗಳಿವೆ. ಈ ಎಲ್ಲಾ ಭಾಷೆಗಳಲ್ಲಿ ಶ್ರೇಷ್ಠವಾದದ್ದು ಕನ್ನಡ ಭಾಷೆ ಎಂದು ಶ್ಲಾಘಿಸಿದರು.
ವಿದೇಶ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಸಂಸ್ಕೃತಿ, ಕಲೆ, ಸಾಹಿತ್ಯ, ಭಾಷೆ, ಸುಭಿಕ್ಷ ಮತ್ತು ಕ್ಷೇಮವಾಗಿ ಸಂಪದ್ಭರಿತ ದೇವಾಲಯಗಳು ಇದ್ದು, ಕನ್ನಡ ನಾಡನ್ನು ಹೊರತುಪಡಿಸಿ ಬೇರೆಲ್ಲೂ ಈ ರೀತಿ ಕಾಣಲು ಸಾಧ್ಯವಿಲ್ಲ ಎಂದು ಹೇಳಿದರು.
ನಾವೆಲ್ಲಾ ಕನ್ನಡ ನಾಡಿನಲ್ಲಿ ಹುಟ್ಟಿ ಮಾತೃಭಾಷೆ ಕನ್ನಡವನ್ನು ಕಲಿತು, ಕನ್ನಡ ಸಂಘಗಳ ಸ್ಥಾಪನೆ ಜೊತೆಗೆ ಕನ್ನಡ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ತಾಯಿ ಭುವನೇಶ್ವರಿಗೆ ವಂದಿಸಿದರು.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದರೆ ಮುಂದೆ ಕನ್ನಡ ಐಚ್ಚಿಕ ವಿಷಯದಲ್ಲಿ ಎಂ.ಎ ಪದವಿ ಪಡೆಯಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಓರ್ವ ಮಹಿಳೆ ಮಧ್ಯರಾತ್ರಿಯಲ್ಲಿ ನಿರ್ಭೀತಿಯಿಂದ ಓಡಾಡುವಂತಾದಾಗ ಸ್ವಾತಂತ್ರ್ಯಕ್ಕೆ ನಿಜ ಅರ್ಥ ಬರುತ್ತದೆ. ಈ ಕಾಲೇಜಿಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದಿಂದ ಅನುದಾನ ತಂದು ಕಾಲೇಜು ಅಭಿವೃದ್ಧಿಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮೂಡಲಗಿರಿಯಪ್ಪ ಮಾತನಾಡಿ, ಕಾಲೇಜಿನ ಹೆಚ್ಚು ಕೊಠಡಿಗಳನ್ನು ನಿರ್ಮಾಣ ಮಾಡಲು ೫ ಕೋಟಿ ರೂ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ದಾಮೋದರ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಐಡಿಎಸ್ಜಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಸುಧ ಭಾಗವಹಿಸಿ ಅಕ್ಕನ ವಚನಗಳ ಸ್ತ್ರೀವಾದಿ ನೆಲೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಪ್ರಾಧ್ಯಾಪಕರುಗಳಾದ ಶ್ರೀನಿವಾಸ್, ದೀಕ್ಷಿತ್, ಗ್ರಂಥಪಾಲಕ ದೇವರಾಜ್, ನಗರಸಭೆ ಸದಸ್ಯ ಶಾದಬ್ ಆಲಂಖಾನ್, ಧ್ರುವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಮಾಲ ಸ್ವಾಗತಿಸಿದರು.
It is everyone’s responsibility to preserve and nurture the mother tongue Kannada.

Leave a Reply