ಚಿಕ್ಕಮಗಳೂರು: : ಕಾರ್ಯಾಂಗ, ಶಾಸಕಾಂಗ ಒಗ್ಗಟ್ಟಾಗಿ ಸಮರ್ಪಕ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಾಧ್ಯ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು.
ಅವರು ಚಿಕ್ಕದೇವನೂರು, ನಾಗರಾಳು, ದೇವನೂರು ಗ್ರಾಮ ಪಂಚಾಯಿತಿಗಳ ಸಹಭಾಗಿತ್ವದಲ್ಲಿ ಚಿಕ್ಕದೇವನೂರಿನಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಜನಸಂಪರ್ಕ ಸಭೆಗಳ ಉಪಯೋಗವನ್ನು ಕ್ಷೇತ್ರದ ಜನರು ಪಡೆದುಕೊಳ್ಳಲು ತಮ್ಮ ಸಮಸ್ಯೆಗಳಿಗಾಗಿ ವಿವಿಧ ಇಲಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ, ಈ ನಿಟ್ಟಿನಲ್ಲಿ ಎಲ್ಲಾ ಇಲಾಖಾಧಿಕಾರಿಗಳನ್ನು ತಮ್ಮ ಗ್ರಾಮಕ್ಕೆ ಕರೆತಂದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಸಂಪರ್ಕ ಸಭೆಗಳನ್ನು ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರಿರುವ ಕಡೆಗೆ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಕಲ್ಪ ಮಾಡಿದ್ದಾರೆಂದು ಶ್ಲಾಘಿಸಿದರು.
ಮೊದಲಿಗೆ ರಾಜ್ಯಮಟ್ಟದಲ್ಲಿ ಈ ಜನಸಂಪರ್ಕ ಸಭೆ ನಡೆಸಿ ಈ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಭಾಗವಹಿಸಿ ತಾಲ್ಲೂಕು ಮಟ್ಟದ ಜನರ ಸಮಸ್ಯೆಗಳಿಗೆ ಬೆಳಕು ಚೆಲ್ಲುವಂತೆ ಸೂಚನೆ ನೀಡಿದ್ದಾರೆಂದು ಹೇಳಿದರು.
ನಂತರ ಶಾಸಕರ ನೇತೃತ್ವದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಬೇಕೆಂಬ ಸರ್ಕಾರದ ಆದೇಶದಂತೆ ಈಗಾಗಲೇ ಹಲವಾರು ಸಭೆಗಳನ್ನು ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇದರ ಮುಂದುವರೆದ ಭಾಗವಾಗಿ ತಾವು ಹೋಬಳಿ, ಗ್ರಾ.ಪಂ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಸರ್ಕಾರದ ಸೌಲಭ್ಯಗಳಾದ ೫ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪದಿದ್ದರೆ ಅಂತಹ ಸಮಸ್ಯೆಗಳನ್ನು ಚುಟುಕಾಗಿ ಅಧಿಕಾರಿಗಳ ಗಮನಕ್ಕೆ ತಂದರೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಸಖರಾಯಪಟ್ಟಣ ಹೋಬಳಿಗೆ ಲೋಕೋಪಯೋಗಿ ಇಲಾಖೆ ವತಿಯಿಂದ ೨೫.೫ ಕೋಟಿ ರೂ ಅನುದಾನ ಮಂಜೂರು ಮಾಡಿದ್ದೇವೆ, ಕ್ಷೇತ್ರದ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಮುದಾಯ ಭವನ, ದೇವಾಲಯಗಳಿಗೆ ೪ ಕೋಟಿ ರೂ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಚುನಾವಣಾ ಪೂರ್ವದಲ್ಲಿ ಈ ಭಾಗದ ಜನರು, ರೈತರು ಕೆರೆ ತುಂಬಿಸುವ ಯೋಜನೆ ಜಾರಿಮಾಡಬೇಕೆಂದು ಮನವಿ ಸಲ್ಲಿಸಿದ್ದನ್ನು ಮನಗಂಡು ಎತ್ತಿನ ಹೊಳೆ ಯೋಜನೆಯ ಮೂಲಕ ಕೆರೆ ತುಂಬಿಸಿದ್ದು, ಈಗಾಗಲೇ ಬೆಳವಾಡಿ, ದೇವನೂರು ಕೆರೆ ಭರ್ತಿಯಾಗಿದೆ ಎಂದರು.
೪೦೦ ಕೋಟಿ ರೂ ವೆಚ್ಚದ ಭದ್ರಾ ಉಪಕಣಿವೆ ಕೆರೆ ತುಂಬಿಸುವ ಯೋಜನೆಗೆ ಸಧ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ. ದೇವನೂರು ಕೆರೆ ಭರ್ತಿಯಾಗಿರುವುದರಿಂದ ಈ ಮೂರು ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಬೋರ್ವೆಲ್ಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗಿ ರೈತರ ಬದುಕು ಹಸನಾಗಿದೆ ಎಂದು ಹೇಳಿದರು.
ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಖರಾಯಪಟ್ಟಣ ಹೋಬಳಿ ಮಟ್ಟದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಬಂದಂತ ಅರ್ಜಿಗಳನ್ನು ಇಲಾಖೆವಾರು ತಾಲ್ಲೂಕು ಮಟ್ಟದ ಅಧಿಕಾರಿಗಳು ವಿಂಗಡಣೆ ಮಾಡಿ ಶಾಸಕರ ಸೂಚನೆ ಮೇರೆಗೆ ನಿಗಧಿತ ಕಾಲಾವಧಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದರು.
ನಾಗರೀಕರು ತಮ್ಮ ಮೂಲಭೂತ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಹಂತದಲ್ಲಿ ಪರಿಹರಿಸಲು ಪ್ರತೀ ಪಂಚಾಯಿತಿಯಲ್ಲಿ ತಿಂಗಳ ಮೊದಲ ಶನಿವಾರ ‘ಪಂಚಾಯಿತಿ ಕಟ್ಟೆ’ ಎಂಬ ನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ಮೂಲಕ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ನಾಗರಾಳು ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ, ಉಪಾಧ್ಯಕ್ಷ ಅಶೋಕ್, ದೇವನೂರು ಗ್ರಾ.ಪಂ ಅಧ್ಯಕ್ಷೆ ದೀಪಾ ದಕ್ಷಿಣಮೂರ್ತಿ, ಉಪಾಧ್ಯಕ್ಷ ರವಿಕುಮಾರ್, ಚಿಕ್ಕದೇವನೂರು ಗ್ರಾ.ಪಂ ಅಧ್ಯಕ್ಷೆ ವಸಂತ, ಉಪಾಧ್ಯಕ್ಷೆ ರಂಗಮ್ಮ, ಸದಸ್ಯರುಗಳಾದ ಚಂದ್ರಶೇಖರ್, ಕಿರಣ್, ಲೋಹಿತ್, ಸುಲೋಚನ, ಶೋಭ, ಸರಸ್ವತಿ, ಚೇತನ್, ಬಸವರಾಜ್, ಶಶಿಧರ್, ಆನಂದ್, ಷಣ್ಮುಖಪ್ಪ, ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮೋಹನ್ ನಾಯಕ್, ಕಡೂರು ತಹಶೀಲ್ದಾರ್ ಪೂರ್ಣಿಮಾ ಉಪಸ್ಥಿತರಿದ್ದರು.
Public relations meeting organized in Chikkadevanagar
