ಚಿಕ್ಕಮಗಳೂರು: -ಭಾರತ ದೇಶದಲ್ಲಿ ಸ್ವಾತಂತ್ರ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಇವರು ಇಡಿ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ವಿರುದ್ಧ ಚಾರ್ಜ್ಶೀಟ್ ಹಾಕುವ ಮೂಲಕ ಸೇಡಿನ ರಾಜಕಾರಣ ಮಾಡಿ ದೇಶಕ್ಕೆ ತ್ಯಾಗ ಮಾಡಿದವರಿಗೆ ಅಪಮಾನ ಮಾಡಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಆರೋಪಿಸಿದರು.
ಅವರು ಇಂದು ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ಇಂದು ಸ್ಪಷ್ಟ ಬಹುಮತದಿಂದ ಅಧಿಕಾರವನ್ನು ಕೇಂದ್ರಸರ್ಕಾರ ನಡೆಸುತ್ತಿಲ್ಲ, ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಪಾಪದ ಕೊಡ ತುಂಬಲಿದೆ. ಸರ್ಕಾರ ಪಥನವಾಗಲಿದೆ ಎಂದು ಭವಿಷ್ಯ ನುಡಿದರು.
ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ ಬಿಜೆಪಿ ಒಡೆದು ಹಾಳುವ ನೀತಿ ಅನುಸರಿಸುತ್ತಿದೆ ಎಂದು ದೂರಿದ ಅವರು, ಮುಂಬರುವ ೨೦೨೯ ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.
ಬಿಜೆಪಿ ಮುಖಂಡರ ಮನೆಯಲ್ಲಿ ಕೋಟ್ಯಾಂತರ ರೂ ಬೆಂಕಿಗಾಹುತಿಯಾದರೂ ತನಿಖೆ ಕೈಗೊಳ್ಳದ ಇಡಿಯವರ ವಿಪಕ್ಷ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ಶೀಟ್ ಸಲ್ಲಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.
ಅಮಿತ್ ಷಾ ಅವರು ಗುಜರಾತ್ನಲ್ಲಿ ನಡೆದ ನರಮೇದದಲ್ಲಿ ಭಾಗಿಯಾಗಿದ್ದಾರೆಂಬ ಕಾರಣಕ್ಕೆ ಜೈಲಿಗೆ ಕಳಿಸಿದ್ದ ಸೇಡನ್ನು ತೀರಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ಪಕ್ಷ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದರು.
ದೇಶದ ಸುಭದ್ರತೆಗೆ, ಐಕ್ಯತೆಗಾಗಿ ೪ ಸಾವಿರ ಕಿ.ಮೀಗಳ ಪಾದಯಾತ್ರೆ ನಡೆಸಿದ ರಾಹುಲ್ ಗಾಂಧಿಯವರು ದೇಶದ ಎಲ್ಲಾ ವರ್ಗದ ಬಡವರನ್ನು ಪ್ರೀತಿಯಿಂದ ಕಾಣುವ ಏಕೈಕ ನಾಯಕನಿಗೆ ಚಾರ್ಜ್ಶೀಟ್ ಹಾಕುವ ಮೂಲಕ ಅಪಮಾನ ಮಾಡಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಸದಸ್ಯರಾದ ರಘು, ಸೋಮಶೇಖರ್, ನಗರಸಭೆ ಸದಸ್ಯರಾದ ಮುನೀರ್, ಪರಮೇಶ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಇಂದಾವರ ಲೋಕೇಶ್, ಪ್ರಕಾಶ್, ಸೋಮಶೇಖರ್, ರಾಘವೇಂದ್ರ, ಕೆ. ಭರತ್, ರಾಜೇಶ್, ಪುನೀತ್, ಲಕ್ಯಾ ಸಂತೋಷ್ ಮತ್ತಿತರರು ಭಾಗವಹಿಸಿದ್ದರು.
Block Congress protests against the central government