May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಾಜ್ಯದಲ್ಲಿ 100 ಕಾಲುಸಂಕ ನಿರ್ಮಾಣಕ್ಕೆ ನೀಲಿ ನಕ್ಷೆ

ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರತೀವರ್ಷ ೧೦೦ ಕಾಲುಸಂಕ ನಿರ್ಮಿಸಲು ನೀಲಿ ನಕ್ಷೆ ತಯಾರಿಸಲಾಗಿದ್ದು, ಈಗಾಗಲೇ ೨೦ ಕೋಟಿ ರೂ. ಅನುದಾನದಲ್ಲಿ ೨೦ ಕಡೆ ಕಾಲುಸಂಕ ನಿರ್ಮಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಮಾನ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮೂಡಿಗೆರೆ ತಾಲ್ಲೂಕಿನ ಹಳಸೆ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ೩೬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಿಸಲು ಪ್ರಾಥಮಿಕ ಹಂತದಲ್ಲಿ ತಲಾ ಒಂದು ಕೋಟಿ ರೂ. ಅನುದಾನ ಒದಗಿಸಲಾಗಿದೆ. ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ಮಳೆಯಿಂದ ರಸ್ತೆ, ಸೇತುವೆ, ರೈತರ ಬೆಳೆ ಮತ್ತಿತರ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಈ ಸಂಬಂಧದ ವರದಿ ಬಂದ ಕೂಡಲೆ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ಸೂಚನೆ ನೀಡಲಿದ್ದಾರೆ. ೨೦೧೯ ರಿಂದ ನಿರಂತರವಾಗಿ ಅತಿವೃಷ್ಟಿಯುಂಟಾಗಿ ಸೇತುವೆ, ರಸ್ತೆಗಳಿಗೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಗುಡ್ಡ ಕುಸಿತದಿಂದ ಜಮೀನುಗಳಿಗೆ ಹಾನಿಯಾಗಿದ್ದು, ಅವುಗಳೆಲ್ಲವನ್ನು ಸರಿಪಡಿಸಲಾಗಿದೆ. ಕೆಲವೆಡೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಮೂಡಿಗೆರೆ-ಸಕಲೇಶಪುರ ನಡುವಿನ ೪೦ ಕಿ.ಮೀ. ರಸ್ತೆ ಹಾನಿಗೊಳಗಾಗಿದ್ದು, ಈ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಿಯಾಯೋಜನೆ ತಯಾರಿಸಲಿದ್ದಾರೆ. ಕ್ರಿಯಾಯೋಜನೆ ಸಿದ್ಧವಾದ ಕೂಡಲೇ ಅಗತ್ಯವಾದ ಅನುದಾನ ಒದಗಿಸಲಾಗುವುದು. ೨೦೧೪ ರಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಡಾ.ಎಚ್.ಸಿ.ಮಹದೇವಪ್ಪ ಅವರು ರಾಜ್ಯದ ವಿವಿಧೆsಡೆ ೪೦ ಸೇತುವೆ ನಿರ್ಮಿಸಲು ಮಂಜೂರಾತಿ ನೀಡಿದ್ದರು. ಅದರ ನಿರ್ಮಾಣ ಕಾಮಗಾರಿ ಹೊಣೆಯನ್ನು ಕೆಆರ್‌ಡಿಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು.

ಅದರಲ್ಲಿ ೨೦ ಸೇತುವೆ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ೨೦ ಕಡೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಮೂಡಿಗೆರೆ-ಸಕಲೇಶಪುರ ರಾಜ್ಯ ಹೆದ್ದಾರಿಯ ಬೆಟ್ಟದಮನೆ ಗ್ರಾಮದಲ್ಲಿ ಹೇಮಾವತಿ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಆರಂಭವಾಗಿ ೧೧ ವರ್ಷವಾದರೂ ತಾಂತ್ರಿಕ ಅಡಚಣೆಯಿಂದಾಗಿ ಪೂಣಗೊಂಡಿಲ್ಲ. ಈ ನಡುವೆ ಕೆಆರ್‌ಡಿಸಿಎಲ್ ಸಂಸ್ಥೆಯನ್ನು ಲೋಕೋಪಯೋಗಿ ಇಲಾಖೆಗೆ ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕಾಡಾನೆ ಮತ್ತಿತರ ವನ್ಯಪ್ರಾಣಿಗಳ ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯದ ಸುತ್ತ ವಾರ್ಷಿಕ ೧೦೦ ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗುವುದು. ಈಗಾಗಲೆ ಗುಂಡ್ಲುಪೇಟೆ, ಹಾಸನ ಮತ್ತಿತರ ಕಡೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ನಡೆದಿದೆ. ಜಿಲ್ಲೆಯ ಕಾಡಾನೆ ಇರುವ ಪ್ರದೇಶದ ಅರಣ್ಯ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ನೀಲಿ ನಕ್ಷೆ ತಯಾರಿಸಲಾಗಿದೆ. ಕಾಡಾನೆಗಳಿಗೆ ಅರಣ್ಯದಲ್ಲಿ ನೀರು ಮತ್ತು ಆಹಾರವಿಲ್ಲದೆ ಕಂಗಾಲಾಗಿ ನಾಡಿಗೆ ಆಹಾರ, ನೀರು ಹುಡುಕಿಕೊಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆನೆಪಥ ನಿರ್ಮಿಸಿ ನೀರು, ಆಹಾರ ಸೇರಿದಂತೆ ಎಲ್ಲ ವ್ಯವಸ್ಥೆ ಒದಗಿಸಿ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ನಯನ ಮೋಟಮ್ಮ, ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮತ್ತಿತರರು ಗೋಷ್ಠಿಯಲ್ಲಿದ್ದರು.

ಮೂಡಿಗೆರೆಗೆ ಆಗಮಿಸಿದ ಸಚಿವರು, ಶಿಥಿಲಗೊಂಡಿರುವ ದೇವವೃಂದ-ಜಪಾವತಿ ಸೇತುವೆಯನ್ನು ವೀಕ್ಷಿಸಿದರು. ರಾತ್ರಿ ಮೂಡಿಗೆರೆಯಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಬೆಳಿಗ್ಗೆ ಮಳೆಹಾನಿಯಾಗಿರುವ ರಸ್ತೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ನಯನ ಮೋಟಮ್ಮ, ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀಧರ್ ಹಾಜರಿದ್ದರು.

Blueprint for construction of 100-kilometer bridge in the state

Related posts

ಪತ್ರಕರ್ತರ ಸರ್ವತೋಮುಖ ಅಭಿವೃದ್ದಿಯೇ ಸಂಘದ ಧ್ಯೇಯ

Team Suddigara

ಡಾ. ಬಿ.ಆರ್. ಅಂಬೇಡ್ಕರ್ ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ

Team Suddigara

ಎಲ್‌ಜಿಕೆ-ಯುಜಿಕೆ ತರಗತಿ ಪ್ರಾರಂಭ ಶ್ಲಾಘನೀಯ

Team Suddigara

Leave a Comment