ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕಿನ ಬಗ್ಗೆ ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ ಮತ್ತು ಉದ್ದೇಶ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಅವರು ಇಂದು ಕ್ಷೇತ್ರದ ವ್ಯಾಪ್ತಿಯ ದೇವಗೊಂಡನಹಳ್ಳಿ, ಬೆಳವಾಡಿ, ಕಳಸಾಪುರ, ಮಾಚಗೊಂಡನಹಳ್ಳಿ, ಜೋಡಿಲಿಂಗದಹಳ್ಳಿ ಈ ಗ್ರಾಮ ಪಂಚಾಯಿತಿಗಳ ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ಗ್ರಾಮಗಳ ರಸ್ತೆ ಅಭಿವೃದ್ಧಿ ಬೀದಿದೀಪ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ದೇಶಕ್ಕೆ ಮಾದರಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನಪ್ರಿಯಗೊಂಡಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹದಿನಾರು ವರೆ ವರ್ಷಗಳ ಸುದೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಎಂದು ಬಣ್ಣಿಸಿದರು.
ಗುಜರಾತ್ ರಾಜ್ಯದ ಮಾದರಿಯಲ್ಲಿ ಕರ್ನಾಟಕವನ್ನು ಅಭಿವೃದ್ಧಿ ಮಾಡುತ್ತೇವೆ ಎಂಬುದನ್ನು ಜಾಹಿರಾತು ಮೂಲಕ ನೋಡಿದ್ದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಗ್ಯಾರಂಟಿ ಯೋಜನೆಯ ಮಾದರಿ ನೋಡಿ ಉತ್ತರ ಭಾರತ, ಹರಿಯಾಣ, ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಸಿವೆ ಎಂದು ಹೇಳಿದರು.
೨೦ ಅಂಶಗಳ ಕಾರ್ಯಕ್ರಮದ ಮೂಲಕ ಶೋಷಿತ, ಬಡ ವರ್ಗದ ಎಲ್ಲಾ ಜನರನ್ನು ಸಮಾನವಾಗಿ ಕಂಡು ಸರ್ವರೂ ಸಮಾಜದ ಮುನ್ನಲೆಗೆ ತರಬೇಕೆಂಬ ಪರಿಕಲ್ಪನೆಯನ್ನು ಇಂದಿರಾ ಗಾಂಧಿಯವರು ಹೊಂದಿದ್ದರು ಎಂದು ತಿಳಿಸಿದರು.
ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತಂದು ಇಂದಿರಾ ಗಾಂಧಿ, ಡಿ. ದೇವರಾಜ್ ಅರಸ್ ಭೂ ರಹಿತರಿಗೆ ಭೂಮಿಯನ್ನು ಮಂಜೂರು ಮಾಡಿದ್ದರು ಎಂದು ವಿವರಿಸಿದರು.
ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಂದಾಯ ಗ್ರಾಮಗಳನ್ನು ಆಯ್ಕೆಮಾಡುವ ಮೂಲಕ ವಾಸಿಸುವವನಿಗೆ ಹಕ್ಕುಪತ್ರ ನೀಡಿ ಮನೆ ಕೊಡುವ ಭರವಸೆಯನ್ನು ಕೊಟ್ಟು, ವಾಸಿಸುವವನೇ ಮನೆಯ ಒಡೆಯ ಎಂಬ ಕಾನೂನು ಜಾರಿಗೆ ತಂದವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಭೈರೇಗೌಡ ಎಂದು ತಿಳಿಸಿದರು.
ವಿರೋಧ ಪಕ್ಷದ ಆರೋಪಗಳಿಗೆ ಜನ ಮೆಚ್ಚುವ ರೀತಿ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಜಾತ್ಯಾತೀತ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮದವರನ್ನು ಸಮಾನವಾಗಿ ಪ್ರೀತಿಯಿಂದ ಕಾಣುತ್ತದೆ ಎಂದು ತಿಳಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಸುಮಾರು ೨ ಕೋಟಿ ರೂ ವೆಚ್ಚದ ಅನುದಾನದಲ್ಲಿ ಬೀದಿದೀಪ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸರ್ಕಾರದ ಈ ಸೌಲಭ್ಯವನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಸರ್ಕಾರ ಬಂದು ಎರಡು ವರ್ಷಗಳಾಗಿದ್ದು, ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಈ ರೀತಿಯ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಮೂಲಕ ತಕ್ಕ ಉತ್ತರ ನೀಡುತ್ತಿದ್ದೇವೆ ಎಂದು ಹೇಳಿದರು.
ಕಳೆದ ೨೫ ವರ್ಷಗಳಿಂದ ಅಭಿವೃದ್ಧಿ ಕಾಣದೇ ಇದ್ದ ಈ ರಸ್ತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಹೆಚ್.ಡಿ. ತಮ್ಮಯ್ಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಚುನಾವಣಾ ಪೂರ್ವದಲ್ಲಿ ಜೋಡಿ ಲಿಂಗದಹಳ್ಳಿ ದೇವಗೊಂಡನಹಳ್ಳಿ, ಬೆಳವಾಡಿ, ಕಳಸಾಪುರ, ಮಾಚಗೊಂಡನಹಳ್ಳಿ, ಗ್ರಾಮಸ್ಥರು ನೀಡಿದ ಪ್ರೀತಿ, ವಿಶ್ವಾಸ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರ ಆಯ್ಕೆಗೆ ಶ್ರಮಿಸಿದ ಕಾರ್ಯಕರ್ತರನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಕೃಷ್ಣಮೂರ್ತಿ, ಅಮೀರ್, ಜಗದೀಶ್, ಶಾಂತಕುಮಾರ್, ಸಂತೋಷ್, ಕುಮಾರ್, ಗುರು, ಮಧು, ಯೋಗೀಶ್, ಹರ್ಷದ್, ಪ್ರವೀಣ ಮತ್ತಿತರರು ಉಪಸ್ಥಿತರಿದ್ದರು.
Road development at a cost of Rs 2 crore
