ಚಿಕ್ಕಮಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.
ಚಿಕ್ಕಮಗಳೂರು ಬಿ.ಎಂ.ಎಸ್ ಸಂಘದ ಜಿಲ್ಲಾಧ್ಯಕ್ಷೆ ಕ್ಯಾತನಬೀಡು ಗಾಯಿತ್ರಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ಸಂಘವು ಕಳೆದ ೧೫ ವರ್ಷಗಳಿಂದ ಆಶಾ ಕಾರ್ಯಕರ್ತೆಯರ ಅಭಿವೃದ್ಧಿಗೆ ಮತ್ತು ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದು, ದೇಶದ ಅತಿ ದೊಡ್ಡ ಕಾರ್ಮಿಕ ಸಂಘಟನೆಯಾದ ಭಾರತೀಯ ಮಜ್ದೂರ್ ಸಂಘಕ್ಕೆ ಸಂಯೋಜನೆಗೊಂಡಿದೆ. ಸಂಘಟನೆಯು ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಅವರಲ್ಲಿ ದೇಶಪ್ರೇಮ, ರಾಷ್ಟ್ರಭಕ್ತಿ, ಸಾಮಾಜಿಕ ಕಳಕಳಿಯನ್ನು ಮೂಡಿಸುತ್ತಿದೆ.
ನಮ್ಮ ಬೇಡಿಕೆಗಳಾದ ಪ್ರತಿ ತಿಂಗಳು ಗೌರವಧನವನ್ನು ನಿಗಧಿತ ದಿನಾಂಕದಂದು ನೀಡಬೇಕು, ತಿಂಗಳಿಗೆ ೨೦ ಸಾವಿರ ರೂಗಳಿಗೆ ಗೌರವಧನವನ್ನು ಹೆಚ್ಚಿಸಬೇಕು. ಇಎಸ್ಐ, ಪಿಎಫ್, ಪಿಕ್ಸೆಡ್ ಇನ್ಸೆಂಟಿವ್ ಸೇರಿಸಿ ಕೊಡಬೇಕು, ನಿವೃತ್ತಿ ವೇಳೆಯಲ್ಲಿ ಸಿಗುವ ಭತ್ಯೆಯನ್ನು ತಕ್ಷಣ ನೀಡಬೇಕು. ಆಶಾ ಕಾರ್ಯಕರ್ತೆಯರಿಗೆ ಜೀವವಿಮಾ ಸೌಲಭ್ಯವನ್ನು ನೀಡುವ ಜೊತೆಗೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಕುಟುಂಬದವರಿಗೆ ಆರೋಗ್ಯ ವಿಮಾ ಸೌಲಭ್ಯವನ್ನು ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕೂಡಲೇ ಈ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ರಾಜ್ಯಸರ್ಕಾರ ಸ್ಪಂದಿಸದೆ ಮುಂದೂಡುತ್ತಿರುವುದು ವಿಷಾಧನೀಯ ಎಂದು ಬೇಡಿಕೆಗಳನ್ನು ಬಗೆಹರಿಸಿ ಪರಿಹರಿಸಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ವಿಕ್ಟೋರಿ ರಾಣಿ, ಮಂಗಳೂರು ಜಿಲ್ಲಾ ಸಂಘದ ಅಧ್ಯಕ್ಷೆ ರೇವತಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
Appeal to the Health Minister to fulfill the various demands of ASHA workers
