ಹಾಸನ: ‘ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿರುವುದಕ್ಕೆ ಸರ್ಕಾರಕ್ಕೆ ಧನ್ಯವಾದಗಳು. ಈ ಬಗ್ಗೆ ಹುಟ್ಟಿಕೊಂಡಿರುವ ಟೀಕೆಗಳನ್ನೆಲ್ಲಾ ನಾನು ಪರಿಗಣಿಸುವುದಿಲ್ಲ’ ಎಂದು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ತಿಳಿಸಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿ, ಬೂಕರ್ ಬಂದ ನಂತರ ಅನೇಕ ಸಾಮಾಜಿಕ ಸ್ಥಿತ್ಯಂತರ ನೋಡಿದ್ದೇನೆ. ಬುಕರ್ ಬಗ್ಗೆ ಕನ್ನಡಿಗರು ಅಪಾರ ಸಂತಸಪಡುತ್ತಿದ್ದಾರೆ. ಅವರಿಗೇ ಪ್ರಶಸ್ತಿ ಬಂದಂತೆ ಸಂಭ್ರಮಿಸಿದ್ದಾರೆ. ನನಗೆ ಬುಕರ್ ತಾನಾಗಿಯೇ ಒಲಿದು ಬಂದ ಪ್ರಶಸ್ತಿ. ಅದರ ನಂತರ ಕರ್ನಾಟಕ ಸರ್ಕಾರ ಹಾಗೂ ಜನರಿಂದ ಹಲವು ಗೌರವಗಳು ಸಿಕ್ಕಿವೆ ಎಂದರು.
ದಸರಾ ಉದ್ಘಾಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಾಗ ನಾನು ವಿದೇಶದಲ್ಲಿ ಇದ್ದೆ. ಸ್ನೇಹಿತರಿಂದ ವಿಚಾರ ತಿಳಿದಾಗ ಅಪಾರ ಸಂತೋಷವಾಯಿತು ಎಂದರು.
ನನ್ನ ಗೆಳತಿ, ಲೇಖಕಿ ಮೈಸೂರಿನ ಮೀನಾ ಮೈಸೂರು ಅವರು ನನಗೆ ಬೂಕರ್ ಅವಾರ್ಡ್ ಬರಲಿ ಎಂದು ಚಾಮುಂಡೇಶ್ವರಿಗೆ ಹರಕೆ ಹೊತ್ತಿದ್ದರಂತೆ. ಬುಕರ್ ಪ್ರಶಸ್ತಿ ಬಂದ ಬಳಿಕ ನನಗೆ ಮೈಸೂರಿಗೆ ಹೋಗುವ ಅವಕಾಶ ಸಿಕ್ಕಿರಲಿಲ್ಲ. ಆದರೆ, ಮೈಸೂರು ಲಿಡ್ ಫೆಸ್ಟಿವಲ್ ಸಂದರ್ಭದಲ್ಲಿ ಮೈಸೂರಿಗೆ ಹೋಗಿದ್ದೆ. ಆಗ ಅಲ್ಲಿ ಸಿಕ್ಕಿದ್ದ ಗೆಳತಿ ಈಗ ಚಾಮುಂಡಿ ಬೆಟ್ಟಕ್ಕೆ ಹೋಗಿ ಹರಕೆ ತೀರಿಸೋಣ ಎಂದಿದ್ದರು. ಆಗಲೂ ಸಮಯದ ಕೊರತೆಯಿಂದ ಹೋಗಲು ಆಗಿರಲಿಲ್ಲ. ಆದರೆ, ಈಗ ಚಾಮುಂಡೇಶ್ವರಿ ತಾಯಿಯೇ ನನ್ನನ್ನು ಕರೆಸಿಕೊಳ್ಳುತ್ತಿದ್ದಾಳೆ ಎಂದು ತಿಳಿಸಿದರು.
ದಸರಾ ಉದ್ಘಾಟನೆಗೆ ತಮ್ಮ ಹೆಸರು ಘೋಷಣೆಯಾದ ನಂತರ ವ್ಯಕ್ತವಾದ ವಿರೋಧಕ್ಕೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ನಾನು ಹೆಚ್ಚಿಗೆ ಮಾತಾಡುವುದಿಲ್ಲ. ಕೋಟ್ಯಂತರ ಕನ್ನಡಿಗರು ತೋರಿಸುತ್ತಿರುವ ಪ್ರೀತಿ, ಅಭಿಮಾನವೇ ಸಾಕು. ಒಬ್ಬರಿಬ್ಬರ ನೆಗೆಟಿವಿಟಿಗೆ ಪ್ರತಿಕ್ರಿಯೆ ಕೊಡಬೇಕಾದ ಅಗತ್ಯವಿಲ್ಲ. ರಾಜಕೀಯ ಮಾಡಬೇಕಾದ ವಿಷಯಕ್ಕೂ, ಮಾಡಬಾರದ ವಿಷಯಕ್ಕೂ ರಾಜಕಾರಣಿಗಳು ಜವಾಬ್ದಾರರಾಗಿರಬೇಕು ಎಂದು ಚಾಟಿ ಬೀಸಿದರು.
ಸಾಧನೆ ಕುರಿತು ಮಾತನಾಡಿ, ‘ಬುಕರ್ ಪ್ರಶಸ್ತಿ ಸುಲಭವಾಗಿ ಸಿಗುವುದಿಲ್ಲ. ಅದನ್ನು ಅಗ್ಗವಾಗಿ ನೋಡಬೇಡಿ. ಕನ್ನಡವನ್ನು ನಾನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪರಿಚಯಿಸಿದ್ದೇನೆ. ಅಲ್ಲಿ ಜನರು ಕನ್ನಡದ ಒಂದೊಂದು ಪುಟ ಓದಿ ಆಶ್ಚರ್ಯ ಪಡುತ್ತಾರೆ. ಇಷ್ಟು ಸಾಧನೆ ಮಾಡಿದ ನನಗೆ ಕೆಸರು ಎರಚಲು ಯಾರಿಗೂ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
I don’t consider all the criticisms that have arisen.

Leave a Reply