ಚಿಕ್ಕಮಗಳೂರು: :ಪ್ರಜೆಗಳೇ ಪ್ರಜೆಗಳಿಗಾಗಿ ಆಳ್ವಿಕೆ ಮಾಡಿಕೊಳ್ಳುವ ವ್ಯವಸ್ಥೆಯಾದ ಪ್ರಜಾಪ್ರಭುತ್ವವು ಇಡೀ ವಿಶ್ವದಲ್ಲಿ ಬಹು ದೊಡ್ಡ ಅಸ್ತ್ರ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಪ್ರತಿಪಾದಿಸಿದರು.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ ಸಸನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆರಂಭಗೊಂಡ ಬೈಕ್ ಜಾಥಾಕ್ಕೆ ಜಿಲ್ಲಾಧಿಕಾರಿ ಮತ್ತಿತರ ಅಧಿಕಾರಿಗಳೊಂದಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
ಪ್ರಪಂಚದ ೧೬೨ ದೇಶಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ನಾಳೆ ಆಚರಿಸಲಾಗುತ್ತದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಈ ದಿನವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ. ಕಳೆದ ವರ್ಷ ರಾಜ್ಯದಲ್ಲೇ ಅತ್ಯಂತ ಅದ್ಧೂರಿಯಾಗಿ ಈ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಸರ್ಕಾರವು ‘ನಮ್ಮ ಮತ ನಮ್ಮ ಹಕ್ಕು’ ಘೋಷಣೆಯಡಿ ಪ್ರಜಾಪ್ರಭುತ್ವವನ್ನು ಆಚರಿಸುವ ಮೂಲಕ ನಾವೆಲ್ಲರೂ ಒಟ್ಟಿಗೆ ಇರೋಣ. ಯದು ಅವರ ನೇತೃತ್ವದಲ್ಲಿ ಇಲ್ಲಿಂದ ತೆರಳಲಿರುವ ಬೈಕ್ ಜಾಥಾವು ಯಶಸ್ವಿಯಾಗಿ ಗುರಿ ತಲುಪಲಿ ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ, ಪ್ರಜಾಪ್ರಭುತ್ವದ ಮಹತ್ವ ಹಾಗೂ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ನಡೆಸಲಾಗುತ್ತಿದ್ದು, ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.
ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಂದ ತಲಾ ಹತ್ತು ಮಂದಿ ಬೈಕ್ ಸವಾರರು ಈ ಜಾಥಾದಲ್ಲಿ ಭಾಗವಹಿಸಲಿದ್ದು, ನಾಳೆ ಸೋಮವಾರ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಜಿಲ್ಲೆಯಿಂದ ಕೂಡ ೧೦ ಮಂದಿ ಪ್ರತಿನಿಧಿಸಲಿದ್ದು, ಬೈಕ್ ಸವಾರರಿಗೆ ಜಿಲ್ಲಾಡಳಿತದಿಂದ ಶುಭ ಹಾರೈಸುವುದಾಗಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರ ಕಳೆದ ಬಾರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಸಹ ಉತ್ತಮ ಕಾರ್ಯಕ್ರಮಗಳನ್ನು ನೀಡಿದೆ. ಬೈಕ್ ಜಾಥಾ, ಅದಾದ ಬಳಿಕ ನಾಳೆ ಸೈಕಲ್ ಜಾಥಾ, ಚಿತ್ರ ಬಿಡಿಸುವ ಸ್ಪರ್ಧೆ, ಛಾಯಾಗ್ರಹಣ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆ ಮತ್ತಿತರ ಕಾರ್ಯಕ್ರಮಗಳನ್ನು ಸಾರ್ವಜನಿಕರನ್ನು ಒಳಗೊಂಡಂತೆ ನಡೆಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ ನುರಿತ ಬೈಕ್ ಸವಾರರು ಇದೀಗ ಜಾಥಾದಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದರಲ್ಲದೆ, ಅವರಿಗೆ ಶುಭ ಕೋರಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಲತಿ ಸ್ವಾಗತಿಸಿದರು. ಬೈಕ್ ಜಾಥಾವು ನಗರದಿಂದ ಹೊರಟು, ಹಿರೇಮಗಳೂರು ಸರ್ಕಲ್, ಬೇಲೂರು, ಹಾಸನ, ಕುಣಿಗಲ್ ಮಾರ್ಗವಾಗಿ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ಅನ್ನು ನಾಳೆ ತಲುಪಲಿದೆ.
Democracy is the world’s greatest weapon

Leave a Reply