ಚಿಕ್ಕಮಗಳೂರು: ಪ್ರಸ್ತುತ ದಿನಗಳಲ್ಲಿ ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ದುರದೃಷ್ಟಕರ. ಪ್ರತಿ ಮನೆಯ ಹಿರಿಯ ಹಾಗೂ ಅಮೂಲ್ಯ ಜೀವಗಳಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ, ವಾರ್ತಾ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಶೆಟ್ಟರ ಬೀದಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ೨೦೨೫-೨೬ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಂದೆ, ತಾಯಿ, ಅಜ್ಜ, ಅಜ್ಜಿ ಸೇರಿದಂತೆ ಹಿರಿಯರು ಇರುವ ಮನೆ ತುಂಬಿದ ಕೊಡವಿದ್ದಂತೆ. ಅವರ ಮಾರ್ಗದರ್ಶನ, ಸಲಹೆಗಳು ಕಿರಿಯರಿಗೆ ಸದಾ ಬೇಕಾಗುತ್ತವೆ. ದಾರಿ ತಪ್ಪದಂತೆ ನಮ್ಮನ್ನು ತಿದ್ದಿ, ತೀಡಿ ಸರಿ ದಾರಿಯಲ್ಲಿ ನಡೆಯುವಂತೆ ಹಿರಿಯರು ಮಾಡುತ್ತಾರೆ. ಆದರೆ ಅವರ ಮಾತುಗಳನ್ನು ನಕಾರಾತ್ಮಕವಾಗಿ ತೆಗೆದುಕೊಂಡು ನಿರ್ಲಕ್ಷ್ಯ ಮಾಡುವುದು ಇಂದಿನ ದಿನಗಳಲ್ಲಿ ಹೆಚ್ಚಾಗಿದೆ ಎಂದ ಅವರು, ಹಿರಿಯರ ಹಿತಾಸಕ್ತಿ ಕಾಪಾಡುವ ಸಲುವಾಗಿಯೇ ತಂದೆ ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ಸು ಪಡೆದುಕೊಳ್ಳುವ ಅವಕಾಶವನ್ನು ನಮ್ಮ ಸರ್ಕಾರ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಈ ದಿನ ಹಿರಿಯರ ಹಕ್ಕುಗಳನ್ನು ಗೌರವಿಸಲು ಮತ್ತು ಅವರ ಮಾರ್ಗದರ್ಶನವನ್ನು ಅನುಸರಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ದಿನವನ್ನು ಸುಂದರಗೊಳಿಸಲು, ಪೋ?ಕರು, ಅಜ್ಜ-ಅಜ್ಜಿ ಮತ್ತು ಮನೆಯಲ್ಲಿ ವಾಸಿಸುವ ಇತರ ಹಿರಿಯರೊಂದಿಗೆ ಸಮಯ ಕಳೆಯುವುದು ಅಗತ್ಯ. ಅವರಿಗೆ ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೊಂದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಹಿರಿಯ ನಾಗರಿಕರು ಸಮಾಜದ ಆಸ್ತಿ. ಬಹಳ? ಜನರು ಅವರನ್ನು ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತ ಇರುವಾಗಲೇ ಅವರನ್ನು ಒಂಟಿಯಾಗಿ ಮಾಡಿ ನೋವು ಕೊಡುತ್ತಿದ್ದಾರೆ. ಹೀಗೆ ಮಾಡುವವರನ್ನು ಮುಂದೆ ಅವರ ಮಕ್ಕಳು ಅನಾಥರಾಗಿಸಿ ದೂರ ಮಾಡಿದರೆ ಪರಿಸ್ಥಿತಿ ಏನು ಎಂಬುದನ್ನು ಅರ್ಥೈಸಿಕೊಂಡು ಬದಲಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರಾದ ಶ್ರೀನಿವಾಸ ವೈ ಆಲದಾರ್ತಿ, ನಿರೂಪಣಾಧಿಕಾರಿ ಡಿ.ಸಂತೋsಷ್ ಭಾಗವಹಿಸಿದ್ದರು.
We must be protectors of the elderly in their old age.
