ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಸಮೀಕ್ಷೆ) ಅವಧಿಯನ್ನು ಅ. 18ರವರೆಗೆ ವಿಸ್ತರಿಸಲಾಗಿದೆ.
ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಡಿಯೊ ಸಂವಾದ ನಡೆಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ಸಮೀಕ್ಷಕ ರಾಗಿರುವ ಶಿಕ್ಷಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಹಿಂದೇಟು ಹಾಕುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ದಸರಾ ರಜೆಯನ್ನು 10 ದಿನ ವಿಸ್ತರಿಸುವಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿ ಹೆಚ್ಚುವರಿಯಾಗಿ ಎಂಟು ಕೆಲಸದ ದಿನ, ಅಂದರೆ ಅ. 18ರವರೆಗೆ ರಜೆ ಘೋಷಿಸಲಾಗಿದೆ. ರಜೆ ಮುಗಿದ ನಂತರ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಅ. 19ರೊಳಗೆ ಸಮೀಕ್ಷೆ ಮುಗಿಯಲಿದೆ’ ಎಂದು ಹೇಳಿದರು.
‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಬಿಟ್ಟು ರಾಜ್ಯದಾದ್ಯಂತ ಸೆ. 22ರಂದು ಆರಂಭಗೊಂಡಿರುವ ಈ ಸಮೀಕ್ಷೆಯು ಮಂಗಳವಾರ ( ಅ.7) ಮುಗಿಯಬೇಕಿತ್ತು. ಆದರೆ, ನಿಗದಿಯಂತೆ ಪೂರ್ಣಗೊಂಡಿಲ್ಲ. ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆಯ ಪ್ರಗತಿಯಲ್ಲಿ ವ್ಯತ್ಯಾಸವಿದೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97ರಷ್ಟು ಪೂರ್ಣ ಗೊಂಡಿದ್ದರೆ, ದಕ್ಷಿಣ ಕನ್ನಡದಲ್ಲಿ ಕೇವಲ ಶೇ 67ರಷ್ಟು ಪ್ರಗತಿ ಕಂಡಿದೆ’ ಎಂದು ಹೇಳಿದರು.
Socio-Educational Survey Period Extended Until October 18th
