May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಉದ್ದೇಶ

ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಕುಟುಂಬದ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರಾರಂಭೋತ್ಸವಕ್ಕೆ ಉತ್ತೇಜನ ನೀಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ, ನಗರಸಭೆ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಗ್ರೇಡ್-೧ ಮತ್ತು ಗ್ರೇಡ್-೨ ದೈಹಿಕ ಶಿಕ್ಷಕರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ೧೪ ಮತ್ತು ೧೭ ವಯೋಮಾನದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಬೆಳಗಾಂನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕ್ರೀಡಾಕೂಟಗಳಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈಗ ತಾಲ್ಲೂಕು ಮಟ್ಟಕ್ಕೆ ೨೫ ಸಾವಿರ ಮತ್ತು ಜಿಲ್ಲಾ ಮಟ್ಟಕ್ಕೆ ೫೦ ಸಾವಿರ ರೂ ಅನುದಾನ ನೀಡುತ್ತಿದ್ದು, ಇದು ಸಾಕಾಗುತ್ತಿಲ್ಲ. ಅನುದಾನ ಹೆಚ್ಚುಮಾಡಿ ಕ್ರೀಡಾಪಟುಗಳಿಗೆ ಅಗತ್ಯ ಇರುವ ಸಲಕರಣೆಗಳು ಹಾಗೂ ಉಡುಪುಗಳನ್ನು ನೀಡುವ ಬಗ್ಗೆ ಸರ್ಕಾರದಲ್ಲಿ ಗಟ್ಟಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆಯಾಗುತ್ತಿರುವ ಬಗ್ಗೆ ಕೆಲವರು ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರ ಮೇಲೆ ದೂರುತ್ತಿದ್ದಾರೆ. ಮುರಾಜಿ, ಏಕಲವ್ಯ, ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರ ವಸತಿ ಶಾಲೆಗಳಿಗೆ ಹೆಚ್ಚು ಸೌಲಭ್ಯ ಕಲ್ಪಿಸಿದೆ ಎಂಬುದನ್ನು ದೂರುವವರು ಮನಗಾಣಬೇಕು ಎಂದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆಂಬ ಗ್ರಾಮಾಂತರ ಮಕ್ಕಳಲ್ಲಿ ಕೀಳರಿಮೆ ಬೇಡ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಪಿ.ಟಿ ಉಷಾ ಅವರ ಸಾಧನೆ ಬಗ್ಗೆ ಈಗಿನ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಧ್ವಜಾರೋಹಣದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಅಗತ್ಯವಾಗಿ ಬೇಕಾಗಿರುವ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಇತ್ಯರ್ಥಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆ ಎಂಬುದನ್ನು ಗುರ್ತಿಸಿ ಉತ್ತಮ ಕ್ರೀಡಾಪಟುಗಳನ್ನಾಗಿ ಮಾಡಬೇಕೆಂದು ಕರೆನೀಡಿದರು.

ಆರೋಗ್ಯ ಮತ್ತು ಸದೃಢ ದೇಹಕ್ಕೆ ಕ್ರೀಡೆ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ವಹಿಸಬೇಕೆಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷರಾದ ಡಾ. ಕೆ.ಪಿ ಅಂಶುಮಂತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ ಶಿವಾನಂದಸ್ವಾಮಿ, ಡಯಟ್ ಉಪನಿರ್ದೇಶಕ ಸುಂದ್ರೇಶ್, ಡಿಡಿಪಿಐ ತಿಮ್ಮರಾಜು, ತಾಲ್ಲೂಕು ದೈಹಿಕ ಪರೀಕ್ಷಕರಾದ ಮಹೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಾಲಾಕ್ಷಮೂರ್ತಿ, ಶಂಕರೇಗೌಡ, ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಸ್ವಾಗತಿಸಿದರು.

The government’s aim is to provide good education to students.

Related posts

ತರೀಕೆರೆಯ ಭಾವಿಕೆರೆಯಲ್ಲಿ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಉದ್ಘಾಟನೆ

Team Suddigara

ಸೂರ್ಯನ ತಾಪಮಾನ ತಡೆಯಲು ಆರೋಗ್ಯ ಸಲಹೆ

Team Suddigara

ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ

Team Suddigara

Leave a Comment