May 18, 2026
Suddigaralive News
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧ

ಚಿಕ್ಕಮಗಳೂರು: ಬಡವರು, ಶೋಷಿತರಿಗೆ ಶಿಕ್ಷಣ, ಆರೋಗ್ಯ ಮತ್ತು ಬದುಕು ಈ ಮೂರು ಅಂಶಗಳಿಗೆ ಒತ್ತುನೀಡಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಅವರು ಇಂದು ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಹಾಗೂ ಕಂಪ್ಯೂಟರ್ ಲ್ಯಾಬ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಸರ್ಕಾರ ಶಿಕ್ಷಣಕ್ಕೆ ಒತ್ತುನೀಡಿ ಅದೇ ರೀತಿ ಆರೋಗ್ಯ ಸೇವೆಗೆ ಉತ್ತಮ ಸ್ಪಂದನೆ ನೀಡಿದ್ದು, ನಗರದಲ್ಲಿ ನಾಲ್ಕು ಭಾಗದಲ್ಲಿ ನಮ್ಮ ಕ್ಲಿನಿಕ್ ತೆರೆದಿದೆ. ನಾಗರೀಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ಲಿನಿಕ್‌ನಲ್ಲಿ ಓರ್ವ ವೈದ್ಯ, ಶುಶ್ರೂಷಕಿ ಹಾಗೂ ಸಿಬಂದಿಯನ್ನು ನೇಮಕ ಮಾಡಿದೆ ಎಂದು ತಿಳಿಸಿದರು.

ಯಾವುದೇ ಖಾಸಗಿ ಕಾಲೇಜಿಗೆ ಕಡಿಮೆ ಇಲ್ಲದಂತೆ ಬಸವನಹಳ್ಳಿ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ಅಗತ್ಯವಾಗಿ ಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳ ಜೊತೆಗೆ ಇಂದು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆಯಾಗಿರುವುದು ಶಿಕ್ಷಣಕ್ಕೆ ಉಪಯುಕ್ತವಾಗಿದೆ ಎಂದರು.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದೊಂದಿಗೆ ಸರ್ಕಾರ ಹಲವಾರು ಯೋಜನೆ ಜಾರಿಗೆ ತಂದು ಶಾಲಾ-ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ ಎಂದು ಹೇಳಿದರು. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ೩೦ ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದು ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಹೊಸ ಹೆಜ್ಜೆಯ ಯೋಜನೆ ಕಾರಣ ಎಂದರು.

ಉತ್ತಮ ಶಿಕ್ಷಣ ಪಡೆದ ಮೆರಿಟ್ ಆಧಾರದಲ್ಲಿ ಶಿಕ್ಷಕರು, ಉಪನ್ಯಾಸಕರು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ನೇಮಕವಾಗುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ದೊರೆಯುತ್ತಿದೆ ಎಂಬುದನ್ನು ಪೋಷಕರು ಮನಗಾಣಬೇಕಾಗಿದೆ ಎಂದು ಹೇಳಿದರು.

ಪ್ರಪಂಚವೇ ಮೆಚ್ಚುವ ರೀತಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರು ನೀಡಿರುವ ಸಂವಿಧಾನದ ಪೀಠಿಕೆಯನ್ನು ಓದಿಸಿ ಒಂದು ಪುಟವನ್ನಾದರೂ ವಿದ್ಯಾರ್ಥಿಗಳಿಂದ ಪಠಣ ಮಾಡುವ ಪರಿಪಾಠವನ್ನು ಸರ್ಕಾರಿ ಶಾಲೆಯಲ್ಲಿ ಆರಂಭಿಸುವಂತೆ ಶಿಕ್ಷಕ ವೃಂದಕ್ಕೆ ಸಲಹೆ ನೀಡಿದರು.

೧೨ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದ ಒಳಿತಿಗಾಗಿ ಹಲವಾರು ರೀತಿಯ ವಚನಗಳ ಮೂಲಕ ಕ್ರಾಂತಿ ಮಾಡಿದ ಮಹಾನ್ ಪುರುಷ ಎಂದು ಬಣ್ಣಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ವಿದ್ಯಾರ್ಥಿನಿಯರು ಈಗಿನಿಂದಲೇ ಶ್ರಮವಹಿಸಿ ಅಧ್ಯಯನಶೀಲರಾಗಿ ಉತ್ತಮ ಶಿಕ್ಷಣ ಪಡೆದು ಮುಂದಿನ ಪರೀಕ್ಷೆಯಲ್ಲಿ ಅತೀ ಹೆಚ್ಚು ರ್‍ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಮತ್ತು ಉಪನ್ಯಾಸಕರಿಗೆ ಹೆಸರು ತರಬೇಕೆಂದು ಕರೆನೀಡಿದರು.

ತಮ್ಮ ಮಕ್ಕಳು ಉತ್ತಮ ವ್ಯಾಸಂಗ ಮಾಡಬೇಕೆಂಬ ಗುರಿಯೊಂದಿಗೆ ಪೋಷಕರು ಶ್ರಮಪಟ್ಟು ನಿಮ್ಮನ್ನು ಕಾಲೇಜಿಗೆ ಕಳುಹಿಸುತ್ತಾರೆ, ಅದಕ್ಕೆ ಪೂರಕವಾಗಿ ಶಿಕ್ಷಣ ಪಡೆದು ಉನ್ನತ ಹುದ್ದೆಗಳಲ್ಲಿ ಆಯ್ಕೆಯಾದಾಗ ಪೋಷಕರ ಶ್ರಮ ಸಾರ್ಥಕ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸತೀಶ್ ಶಾಸ್ತ್ರಿ ವಹಿಸಿ ಎಲ್ಲರನ್ನು ಸ್ವಾಗತಿಸಿದರು, ವೇದಿಕೆಯಲ್ಲಿ ಕಾಲೇಜು ಅಭಿವೃದ್ಧ ಸಮಿತಿ ಸದಸ್ಯ ಶುಭಾನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Government committed to providing basic infrastructure to government schools and colleges

Related posts

ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್-ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ

Team Suddigara

ಆಧುನಿಕ ವಚನಕಾರರ ಧ್ರುವತಾರೆ ಸಿದ್ಧಯ್ಯಪುರಾಣಿಕ್

Team Suddigara

ಸಾರ್ವಜನಿಕರು ಪೊಲೀಸರ ಜನಸ್ನೇಹಿ ಸೇವೆಯನ್ನು ಗೌರವಿಸಿ

Team Suddigara

Leave a Comment