ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿನ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರು, ರೈತ ಸಂಘದ ಮುಖಂಡರು, ಹೋರಾಟಗಾರರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜುಲೈ 15) ಸಭೆ ನಡೆಸಲಿದ್ದಾರೆ.
ಅತ್ಯಾಧುನಿಕ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರಲ್ಲಿ ಪ್ರಾಥಮಿಕ ಅಧಿಸೂಚನೆ, 2022ರಲ್ಲಿ ಅಂತಿಮ ಆದೇಶ ಹೊರಡಿಸಲಾಗಿತ್ತು. ಭೂಸ್ವಾಧೀನ ವಿರೋಧಿಸಿ ಅಂದಿನಿಂದಲೂ ರೈತರು ಹೋರಾಟ ಮಾಡುತ್ತಾ ಬಂದಿದ್ದಾರೆ.
ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ, 231.23 ಎಕರೆ, 185.18 ಎಕರೆ ಮತ್ತು 78.21 ಎಕರೆ ಸೇರಿ 495 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಜೂನ್ 24ರಂದು ಘೋಷಿಸಿದ್ದರು. ಆದರೆ, ರೈತರು ಸರ್ಕಾರದ ನಿರ್ಧಾರವನ್ನು ಒಪ್ಪದೇ ಎಲ್ಲ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ–ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರು ಹೋರಾಟ ಮುಂದುವರಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 5ರಂದು ರೈತ ಸಂಘದ ಮುಖಂಡರು, ಹೋರಾಟಗಾರರು, ಸ್ಥಳೀಯ ರೈತರ ಸಭೆ ಕರೆದಿದ್ದರು. ಕಾನೂನು ತೊಡಕುಗಳಿದ್ದು, ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲು 10 ದಿನಗಳ ಸಮಯ ಕೇಳಿದ್ದರು. ನಿಗದಿಯಂತೆ ಸಭೆ ಮಂಗಳವಾರ ನಡೆಯಲಿದೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ‘ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕು ಎನ್ನುವುದು ಸರ್ಕಾರದ ಕಳಕಳಿ. ಸಿದ್ದರಾಮಯ್ಯ ಅವರು ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದಿದ್ದಾರೆ.
Devanahalli land acquisition chief minister meeting today
