ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯಸರ್ಕಾರದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ೧೦ ಸಾವಿರ ರೂ ಗ್ಯಾರಂಟಿಗೊಳಿಸುವ ಆದೇಶವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿ ಗೌರವಧನ ನೀಡಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಶಾಖೆ ಆಜಾದ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು ೫೦೦ ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ನಂತರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿ ಕೂಡಲೇ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ೧ ಸಾವಿರ ರೂ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು. ಜನಸಂಖ್ಯೆಯ ಮಿತಿ, ಅವೈಜ್ಞಾನಿಕ ಮೌಲ್ಯಮಾಪನ ಶಿಕ್ಷಣದ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈಬಿಡಲು ಹುನ್ನಾರ ನಡೆಸುತ್ತಿರುವ ಆದೇಶವನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ತಾರಾಕೃಷ್ಣ ಮಾತನಾಡಿ, ಸರ್ಕಾರ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರಿಗೆ ೧೦ ಸಾವಿರ ರೂ ಗೌರವ ಧನ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ ಇಂದು ಜಿಲ್ಲಾಮಟ್ಟದಲ್ಲಿ ಮುಂದೆ ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತೆಯರು ಮುಂದಾಗುವುದಾಗಿ ಎಚ್ಚರಿಸಿದ ಅವರು, ಇಂದು ರಾಜ್ಯದ ೩೧ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಹೇಳಿದರು.

ಕಳೆದ ವರ್ಷ ಬೆಂಗಳೂರಿನ ಸ್ವತಂತ್ರ ಮೈದಾನದಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಗಮಿಸಿದ್ದ ಮುಖ್ಯಮಂತ್ರಿಗಳು ಇನ್ನೊಂದು ತಿಂಗಳಲ್ಲಿ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದು, ಇದೂವರೆಗೂ ಕಾರ್ಯರೂಪಕ್ಕೆ ತಂದಿಲ್ಲ ಎಂದು ದೂರಿದರು.

ಸಮಾಜ ಸೇವಕಿ ರಾಧಾಸುಂದ್ರೇಶ್ ಮಾತನಾಡಿ, ಆಶಾ ಕಾರ್ಯಕರ್ತೆರು ಮಾಡಿದ ಕೆಲಸಕ್ಕೆ ಸಮಾನಾಗಿ ವೇತನ ಕೊಡಿ ಎಂದು ಕೇಳುತ್ತಿದ್ದಾರೆ. ನ್ಯಾಯಯುತವಾಗಿರುವ ಅವರ ಬೇಡಿಕೆಗಳನ್ನು ಕೂಡಲೇ ಸರ್ಕಾರ ಇತ್ಯರ್ಥಪಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ ಅವರು, ಸರ್ಕಾರ ನುಡಿದಂತೆ ನಡೆಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ಮುಖಂಡ ಶಿವಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ಮೈನಾ, ಸಂಘದ ತಾಲ್ಲೂಕು ಅಧ್ಯಕ್ಷರುಗಳಾದ ಜ್ಯೋತಿ, ಗೀತಾ, ವಿಮಲಾಕ್ಷಿ.ಬಿ, ಗಾಯತ್ರಿ, ಪವಿತ್ರ, ನಿರ್ಮಲ, ರತ್ನಮ್ಮ, ಸಾವಿತ್ರಿ, ಪ್ರೇಮ, ರೇಷ್ಮ, ಶ್ರೀಲತ, ಆಶಾ, ರೇಣುಕ, ನಂದಿನಿ, ಶೀಲಾ, ನಾಗಮ್ಮ, ನಳಿನ, ಚಂದ್ರಿಕ, ಶಾಂತ, ಮಂಜುಳ, ಲಾವಣ್ಯ, ಮಾಲತಿ, ಕನ್ನಡ ಸೇನೆ ಅಧ್ಯಕ್ಷ ರಾಜೇಗೌಡ, ದಾಸರಹಳ್ಳಿ ಕೃಷ್ಣಪ್ಪ, ಮತ್ತಿತರರು ಇದ್ದರು.

ASHA workers protest demanding fulfillment of various demands

Comments

Leave a Reply

Your email address will not be published. Required fields are marked *