ಚಿಕ್ಕಮಗಳೂರು: `ಭದ್ರ ಬಾಲ್ಯ’ ಯೋಜನೆಯಡಿ ಪ್ರತೀ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕು ಕಾವಲು ಸಮಿತಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಬೀಳಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬೆಂಗಳೂರಿನ ಕೆ.ಹೆಚ್.ಪಿ.ಟಿ. ಸಂಯುಕ್ತಾಶ್ರಯದಲ್ಲಿ ಇಂದು ನಗರದ ಜಿ.ಪಂ. ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಭದ್ರ ಬಾಲ್ಯದ ಪ್ರಧಾನ ಆಶಯಗಳಲ್ಲಿ ಒಂದಾದ ಗ್ರಾಮ ಪಂಚಾಯಿತಿ ಮಟ್ಟದ ಕಾವಲು ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
೧೫ ಮಂದಿಯ ಮಹಿಳಾ ಮತ್ತು ಮಕ್ಕಳ ಹಕ್ಕು ಕಾವಲು ಸಮಿತಿಗೆ ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುವ ಸಾಮರ್ಥ್ಯ ಮತ್ತು ಅಧಿಕಾರ ಇದೆ. ಈ ಸಮಿತಿಗೆ ಮಗುವಿನ ಅಪೌಷ್ಟಿಕತೆ, ಹಸಿವಿನ ಸಮಸ್ಯೆ, ಲೈಂಗಿಕ ಶೋಷಣೆ, ಕೌಟುಂಬಿಕ ಹಿಂಸೆ, ಶಾಲೆಗೆ ಹೋಗದೆ ಇರುವುದು ಇತ್ಯಾದಿ ಸಮಸ್ಯೆಗಳನ್ನು ನಿರ್ವಹಿಸುವ ಸಾಮರ್ಥ್ಯದ ಜೊತೆಗೆ ಅಧಿಕಾರವೂ ಇದೆ. ಈ ಸಮಿತಿಯಲ್ಲಿ ಪೊಲೀಸ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಮುಖ್ಯಶಿಕ್ಷಕರು, ಸ್ವಸಹಾಯ ಸಂಘದ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಒಂದು ವೇಳೆ ಆ ಗ್ರಾ.ಪಂ. ಅಧ್ಯಕ್ಷರು ಮಹಿಳೆಯಾಗಿದ್ದರೆ ಅವರೇ ಈ ಸಮಿತಿಯ ಅಧ್ಯಕ್ಷರೂ ಆಗಿರುತ್ತಾರೆ ಎಂದು ತಿಳಿಸಿದರು.
ಬಾಲ್ಯವಿವಾಹದಂತಹ ಸಂದರ್ಭದಲ್ಲಿ ಈ ಸಮಿತಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದ ಅವರು, ಇಂತಹ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕತೆಯರು ಅಥವಾ ಮೇಲ್ವಿಚಾರಕರನ್ನು ಹೊಣೆ ಮಾಡಲಾಗುತ್ತಿದೆ. ಬಾಲ್ಯವಿವಾಹ ನಡೆಯುತ್ತಿರುವ ವೇಳೆ ಈ ಬಗ್ಗೆ ದೂರು ನೀಡಬೇಕಾಗುತ್ತದೆ. ಒಂದು ವೇಳೆ ಬಾಲ್ಯ ವಿವಾಹ ನಡೆಸಿದ ಕುಟುಂಬದವರು ಪ್ರಭಾವಿಗಳಾಗಿದ್ದರೆ, ದೂರು ನೀಡಿದ ಕಾರಣಕ್ಕೆ ಊರಿನಿಂದ ಹೊರ ಹಾಕುವುದು, ಬೆದರಿಕೆ ಹಾಕುವಂತಹ ಸಂದರ್ಭಗಳು ಕಂಡು ಬಂದಿವೆ. ಈ ಹಿನ್ನೆಲೆಯಲ್ಲಿ ಸಮಿತಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿದರೆ ಈ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.
ಬೆಳೆಯುವ ಮಗುವಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ ಕೊಡಬೇಕು ಎನ್ನುವುದು `ಭದ್ರ ಬಾಲ್ಯ’ ಯೋಜನೆಯ ಮುಖ್ಯ ಉದ್ದೇಶ. ನಮ್ಮ ಜಿಲ್ಲೆಯಲ್ಲಿ ಪೋಕ್ಸೋ, ಬಾಲ ಗರ್ಭಿಣಿ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಲೇ ಹೋಗುತ್ತಿವೆ. ಇದು ಇಡೀ ಕುಟುಂಬದ ಪ್ರಶ್ನೆಯಾಗಿದೆ. ಚಿಕ್ಕ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಗರ್ಭಿಣಿಯಾದಲ್ಲಿ, ಮಾನಸಿಕವಾಗಿ, ದೈಹಿಕವಾಗಿ ಸಾಮರ್ಥ್ಯವಿಲ್ಲದಿರುವ ಸಂದರ್ಭದಲ್ಲಿ ಗರ್ಭಿಣಿಯಾಗಿ ತಾಯ್ತನಕ್ಕೆ ಒಳಗಾಗುವುದರಿಂದ ಆ ರೀತಿ ಹುಟ್ಟಿದ ಮಗುವೂ ಸಮರ್ಥವಾಗಿರುವುದಿಲ್ಲ. ಬಾಲ್ಯ ವಿವಾಹವಾದ ಬಗ್ಗೆ ಪ್ರಕರಣ ದಾಖಲಿಸುವುದರಿಂದ ಹುಡುಗನ ಕುಟುಂಬದ ಕೆಂಗಣ್ಣಿಗೆ ಗುರಿಯಾಗಿ ನಿನ್ನನ್ನು ಮದುವೆಯಾದ ಕಾರಣದಿಂದಾಗಿ ಮನೆ ಮಗ ಜೈಲು ಸೇರಬೇಕಾಯಿತು ಎನ್ನುವ ನಿಂದನೆಗೂ ಒಳಗಾಗಬೇಕಾಗುತ್ತದೆ. ಹೀಗಾದಾಗ ಆಗತಾನೇ ಹುಟ್ಟಿದ ಮಗುವಿನ ಗತಿಯೇನು? ಈ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ಅಕಾಲಿಕ ಗರ್ಭಧಾರಣೆಗೆ ಒಳಗಾಗುವಂತಹ ಪರಿಸ್ಥಿತಿ ನಿರ್ಮಾಣವಾಗದಂತೆ, ಶೋಷಣೆಗೆ ಒಳಗಾಗದಂತೆ ಮುಂಜಾಗ್ರತೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಪ್ರಧಾನವಾದ ಈ ಜಿಲ್ಲೆಯಲ್ಲಿ ೧೦೦೦ ದಷ್ಟಿದ್ದ ಹೆಣ್ಣಿನ ಜನನ ಪ್ರಮಾಣ ಈಗ ೯೦೦ಕ್ಕೆ ಕುಸಿದಿz. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಣ್ಣು ಮಕ್ಕಳ ಜೀವನವನ್ನು ಉಳಿಸುವ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.
ಅಧಿಕಾರಿಗಳು ಹೆಣ್ಣು ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಪೋಕ್ಸೋ, ಬಾಲ್ಯವಿವಾಹ, ಬಾಲ ಗರ್ಭಿಣಿಯಂತಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಂಚಾಯಿತಿ ಮಟ್ಟದ ಕಾವಲು ಸಮಿತಿ ಮೂಲಕ ಕ್ರಮ ವಹಿಸಲಾಗಿದೆ. ಈ ಜಿಲ್ಲೆಯಲ್ಲಿ ಏಳೆಂಟು ಬಾಲ್ಯ ವಿವಾಹಗಳನ್ನು ತಡೆದಿರುವ ಹೆಮ್ಮೆ ನಮ್ಮದಾಗಿದ್ದು, ಇದು ಪ್ರಥಮ ಹೆಜ್ಜೆ. ಗ್ರಾಮ ಮಟ್ಟದಲ್ಲಿ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾವಲು ಸಮಿತಿಯನ್ನು ಉತ್ತೇಜಿಸಿದರೆ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಒಂದು ಹೆಣ್ಣಿಗೆ ಮದುವೆ ೧೮ ವರ್ಷದ ಬಳಿಕ ಎಂದು ಕಾನೂನಿದೆ. ಕೆಲವೊಂದು ಕಾರಣಗಳಿಂದ ಬಾಲ್ಯ ವಿವಾಹವಾಗಿ ಮುಂದೆ ಕಷ್ಟಪಡುತ್ತಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಮಸ್ಯೆಗಳಿಗೆ ಹೆಣ್ಣು ಮಕ್ಕಳು ಒಳಗಾಗದಂತೆ ನಾವು ನೋಡಿಕೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾರ್ಮಿಕ ವರ್ಗದಲ್ಲಿ, ಕೆಲವೊಂದು ಸಮುದಾಯಗಳಲ್ಲಿ ವಲಸಿಗರಲ್ಲಿ ಹಾಗೂ ಅರ್ಧದಲ್ಲೇ ಶಾಲೆ ಬಿಟ್ಟ ಮಕ್ಕಳು ಇಂತಹ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಕಾವಲು ಸಮಿತಿ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಸಮಾಜಕ್ಕೆ ಹಾಗೂ ಹೆಣ್ಣು ಮಕ್ಕಳ ಸಮಸ್ಯೆಗೆ ಪರಿಹಾರ ನೀಡುವ ಕೆಲಸ ನಮ್ಮದು ಎಂದು ಎಂದು ಹೇಳಿದರು.
ಕೆ.ಹೆಚ್.ಪಿ.ಟಿ.ಯ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹೆಚ್.ಎಲ್.ಮೋಹನ್ ಮಾತನಾಡಿದರು. ಕೆಹೆಚ್ಪಿಟಿ ಸಕ್ರಿಯ ಕಾವಲು ಸಮಿತಿ ತರಬೇತಿ ಕೈಪಿಡಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ವೈ.ಆಲದಾರ್ತಿ ಮುಂತಾದವರು ಭಾಗವಹಿಸಿದ್ದರು.
Let the Child Rights Protection Committee function effectively.

Leave a Reply