ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ದಿನಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸದ್ಯವೇ ನಿಗದಿ ಮಾಡಲಿದೆ ಎಂದು ತಿಳಿಸಿದರು.
‘ವಿಷ್ಣುವರ್ಧನ್ ಅವರು ಕನ್ನಡದ ಮೇರುನಟರ ಪೈಕಿ ಒಬ್ಬರು. ಇವರಿಗೆ ಕರ್ನಾಟಕ ರತ್ನ ನೀಡಬೇಕು’ ಎಂದು ವಿಷ್ಣುವರ್ಧನ್ ಕುಟುಂಬ, ಅಭಿಮಾನಿಗಳ ಸಂಘ ಮತ್ತು ಚಲನಚಿತ್ರ ಕಲಾವಿದರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಅಭಿಮಾನ್ ಸ್ಟುಡಿಯೊದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇತ್ತೀಚೆಗೆ ರಾತ್ರೋರಾತ್ರಿ ನೆಲಸಮ ಮಾಡಿದ್ದರಿಂದ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಮೀನು ನೀಡಬೇಕು ಮತ್ತು ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.
ಅಲ್ಲದೇ, ನಟಿಯರಾದ ಜಯಮಾಲಾ, ಶ್ರುತಿ, ತಾರಾ ಅನೂರಾಧ, ಮಾಳವಿಕಾ ಅವಿನಾಶ್ ಅವರು ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ನೀಡುವ ತೀರ್ಮಾನ ಕೈಗೊಂಡಿದೆ.
Vishnuvardhan – B. Saroja Devi to be conferred with ‘Karnataka Ratna’ award

Leave a Reply