ಚಿಕ್ಕಮಗಳೂರು: ಸಮಾಜದಲ್ಲಿ ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢ ಆರೋಗ್ಯವಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆನೀಡಿದರು.
ಅವರು ಇಂದು ಐಡಿಎಸ್ಜಿ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಯುವ ರೆಡ್ಕ್ರಾಸ್ ಘಟಕ, ಐಡಿಎಸ್ಜಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಹಕ್ಕೆ ಕಾಯಿಲೆ ಅಥವಾ ತೊಂದರೆಯಾದಾಗ ಚಿಕಿತ್ಸೆಗೆ ಮುಂದಾಗುತ್ತೇವೆ, ಬಿಪಿ, ಶುಗರ್, ಥೈರಾಯ್ಡ್ ಮುಂತಾದ ಕಾಯಿಲೆಗಳ ಬಗ್ಗೆ ಬೇರೆಯವರೊಂದಿಗೆ ಹಂಚಿಕೊಳ್ಳುತ್ತೇವೆ, ಈ ನಿಟ್ಟಿನಲ್ಲಿ ಸಮುದಾಯದ ಆರೋಗ್ಯ ಸಹ ಅವಶ್ಯಕವಾಗಿದೆ ಎಂದರು.
ತುರ್ತುಪರಿಸ್ಥಿತಿ, ಯುದ್ಧಗಳಲ್ಲಿ ಭಾಗವಹಿಸುವ ವ್ಯಕ್ತಿಗಳಿಗೆ ಬರುವ ನೋವು, ಮಾನಸಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಲು ಘೋಷವಾಕ್ಯವನ್ನು ನೀಡಲಾಗಿದ್ದು, ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಆರೋಗ್ಯವಂತರಾಗಿದ್ದಾರೆಂಬುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಉದ್ದೇಶ ಎಂದು ಹೇಳಿದರು.
ಶೇ.೮ ಕ್ಕಿಂತ ಹೆಚ್ಚು ಪ್ರಪಂಚದಲ್ಲಿ ವಿವಿಧ ರೀತಿಯ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಮೊಬೈಲ್ ಗೀಳು ಹೆಚ್ಚಿಸಿಕೊಂಡವರು ಕೂಡ ಮಾನಸಿಕ ಕಾಯಿಲೆಗೆ ಒಳಗಾಗಿದ್ದಾರೆ ಎಂದು ಅರ್ಥೈಸಲಾಗುತ್ತಿದೆ ಎಂದು ತಿಳಿಸಿದರು.
ಕಾನೂನಿನಲ್ಲಿ ಕರುಣೆ ಇಲ್ಲ, ಸರ್ಕಾರ ನಿಗದಿಪಡಿಸಿರುವ ಅವದಿಗಿಂತ ಮೊದಲು ಮದುವೆಯಾಗಿದ್ದರೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗುತ್ತದೆ. ಎಫ್ಎಸ್ಎಲ್ ವರದಿಯಲ್ಲಿ ಗರ್ಭಿಣಿಯಾಗಿರುವುದು ದೃಢಪಟ್ಟರೆ ಕನಿಷ್ಟ ೨೦ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಡಿಎಸ್ಜಿ ಕಾಲೇಜಿನ ಪ್ರಾಂಶುಪಾಲರಾದ ತಸ್ನಿಮ್ ಕೌಸರ್ ಮನಿಯಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ, ಮಾನಸಿಕ ತಜ್ಞ ಡಾ. ವಿನಯ್ ಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಅನಿಕೇತ್, ಹರ್ಷ, ವೈ.ಎಂ ಲಲಿತ, ಗಣೇಶ್, ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಆರೋಗ್ಯ ಇಲಾಖೆಯ ಬೇಬಿ ಸ್ವಾಗತಿಸಿದರು.
Perfect health is when you are physically and mentally fit.
