ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಬ್ರಿಟೀಷರು ಭಾರತವನ್ನು ವಶಕ್ಕೆ ಪಡೆದರು

ಬೆಳಗಾವಿ: ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಭಾರತವನ್ನು ವಶಕ್ಕೆ ಪಡೆದರು.
ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚನ್ನಮ್ಮ ಸೋಲಿಸಿದರು.
ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವ. 2017 ರಲ್ಲಿ ಕಿತ್ತೂರು ರಾಣಿ ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ನೆನಪಿಸಿದರು.

ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿ ಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

ಸ್ವಾಭಿಮಾನಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆ ಗೆಡಿಸಿದ್ದರು. ನಾಲ್ಕು ಮೈಸೂರು ಯುದ್ಧಗಳನ್ನು ನಡೆಸಿದ್ದರು. ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು. ದೇಶಪ್ರೇಮಿಗಳು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. ಅಂಬೇಡ್ಕರ್ ಅವರ ಮಾತನ್ನು ನಾವು ನೆನಪಿಡಬೇಕು. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

ರಾಣಿ ಚನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನಮ್ಮ ಸರ್ಕಾರ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

The British took control of India by pitting Indians against each other.

Comments

Leave a Reply

Your email address will not be published. Required fields are marked *