Category: ಚಿಕ್ಕಮಗಳೂರು ನಗರ

  • ಯುವಜನತೆ ದುಶ್ಚಟಗಳಿಂದ ದೂರವಿರಿ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ

    ಯುವಜನತೆ ದುಶ್ಚಟಗಳಿಂದ ದೂರವಿರಿ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ

    ಚಿಕ್ಕಮಗಳೂರು, ಆ.೩, ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ಮಾಡಿದರು.

    ರಾಜ್ಯ ಸರ್ಕಾರಿ ನೌಕರರ ಸಂಘ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

    ವಿದ್ಯಾರ್ಥಿ ದೆಸೆಯಲ್ಲಿ ಬಹಳಷ್ಟು ಆಕರ್ಷಣೆಗಳಿರುತ್ತವೆ. ಅವುಗಳ ಹಿಂದೆ ಹೋದರೆ ವಿದ್ಯಾಭ್ಯಾಸ ಮೊಟಕಾಗುತ್ತದೆ, ಬದುಕಿನ ಹಾದಿ ತಪ್ಪುತ್ತದೆ, ಜೀವನದ ಅಧಃಪತನವಾಗುತ್ತದೆ ಎಂದು ಎಚ್ಚರಿಸಿದರು.

    ಇಂದು ಮಾದಕ ವಸ್ತುಗಳ ವ್ಯಾಪಾರಸ್ಥರು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಗುರಿಯಾಗಿಸಿಕೊಂಡಿದ್ದಾರೆ, ಮೊಬೈಲ್‌ಗಳಲ್ಲೇ ಜೂಜಾಟದ ಆಪ್‌ಗಳಿವೆ, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಯುವಜನತೆಗೆ ಜೂಜಾಟವಾಡುವಂತೆ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತುಗಳ ಮೂಲಕ ಬಹಿರಂಗವಾಗಿಯೇ ಪ್ರೇರೇಪಿಸುತ್ತಿದ್ದಾರೆ, ಅಂಗಡಿಗಳಲ್ಲಿ ಗುಟ್ಕಾ, ತಂಬಾಕು, ಸಿಗರೇಟು, ಬೀಡಿ, ಮದ್ಯದಂತಹ ರಕ್ತ ಬೀಜಾಸುರರು ರಾರಾಜಿಸುತ್ತಿದ್ದಾರೆ, ವಿದ್ಯಾರ್ಥಿಗಳು ಮತ್ತು ಯುವಜನತೆ ಇವುಗಳ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಬೇಕು, ಉತ್ತಮ ಭವಿಷ್ಯಕ್ಕಾಗಿ ಅವುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

    ಭವಿಷ್ಯದ ಜೀವನ ಉಜ್ವಲವಾಗಬೇಕಾದರೆ ಇಂದಿನ ವರ್ತಮಾನದಲ್ಲಿ ನಮ್ಮ ನಡತೆ ಉತ್ತಮವಾಗಿರಬೇಕು, ಪ್ರತಿಭಾ ಪುರಸ್ಕಾರ ಎನ್ನುವುದು ಕೇವಲ ಬೆನ್ನು ತಟ್ಟುವುದು ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು, ಪ್ರತಿಭಾ ಪುರಸ್ಕಾರ, ಸನ್ಮಾನಗಳಿಂದ ಮೈಮರೆಯಬಾರದು. ಯಾವುದೇ ಭ್ರಮೆಗೊಳಗಾಗದೆ ಮುಂದಿನ ಶಿಕ್ಷಣವನ್ನು ಶ್ರದ್ಧೆ ಮತ್ತು ಪರಿಶ್ರಮದಿಂದ ಮಾಡಬೇಕು ಎಂದು ತಿಳಿ ಹೇಳಿದರು.

    ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಶಿಕ್ಷಣವಂತರಾಗುವುದರ ಜೊತೆಗೆ ಸಂಸ್ಕಾರವಂತರೂ ಆಗಬೇಕು, ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರಿಂದ ಇನ್ನೂ ಹೆಚ್ಚಿನ ಸಾಧನೆಗೆ ಅವರನ್ನು ಪ್ರೇರೇಪಿಸಿದಂತಾಗುತ್ತದೆ ಎಂದು ತಿಳಿಸಿ ಸಖರಾಯಪಟ್ಟಣದ ಅವಧೂತರು ಹೇಳುತ್ತಿದ್ದ ಹಾಗೆ ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೆ ಆಕರ್ಷಿತರಾಗದೇ ಶ್ರದ್ಧೆ, ಶಿಸ್ತು, ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಪರಿಸ್ಥಿತಿಯಲ್ಲೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು, ಒಂದು ಅವಕಾಶ ತಪ್ಪಿದರೆ ಇನ್ನೊಂದು ಅವಕಾಶದ ಬಾಗಿಲು ತೆರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ತಿಳಿಸಿದರು.

    ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಅಂಕ ಗಳಿಕೆ ಮುಖ್ಯವಲ್ಲ. ಯಾವುದೇ ಕಪ್ಪುಚುಕ್ಕೆ ಇಲ್ಲದೇ ಬದುಕುವುದು ಮುಖ್ಯ ಎಂದು ತಿಳಿಸಿ ಸರ್ಕಾರಿ ನೌಕರರು, ಅಧಿಕಾರಿಗಳು ರೈತ ಪರ ಮತ್ತು ಬಡವರ ಪರವಾಗಿರಬೇಕು, ರೈತರು ಸಹಾಯ ಕೇಳಿ ಬಂದಾಗ ಅವರನ್ನು ಕೂರಿಸಿ ಮಾತನಾಡಿಸಬೇಕು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

    ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ತಾವು ಸಂಘದ ಅಧ್ಯಕ್ಷರಾದ ನಂತರ ಕಳೆದ ೫ ವರ್ಷಗಳಿಂದ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ, ಕಳೆದ ೫ ವರ್ಷಗಳಲ್ಲಿ ೫೦ ಸಾವಿರ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಗಿದೆ, ಪ್ರತಿವರ್ಷ ರಾಜ್ಯಾದ್ಯಂತ ೧೦ ಸಾವಿರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ ಎಂದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರೆಸುವ ಕುರಿತು ಸರ್ಕಾರದೊಂದಿಗೆ ಅನೇಕ ಬಾರಿ ಚರ್ಚಿಸಲಾಗಿದ್ದು, ಹಳೆ ಪಿಂಚಣಿ ಯೋಜನೆ ಆದಷ್ಟು ಶೀಘ್ರವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

    ರಾಜ್ಯ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಸದ್ಯದಲ್ಲೇ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಯಾಗಲಿದೆ, ರಾಜ್ಯದ ೫ ಲಕ್ಷ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರು ಸೇರಿ ೨೫ ಲಕ್ಷ ಜನ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.
    ನಗರದಲ್ಲಿ ನಿರ್ಮಿಸಿರುವ ಸರ್ಕಾರಿ ನೌಕರರ ಭವನದ ಅಭಿವೃದ್ಧಿಗೆ ಅನುದಾನ ನೀಡುವಂತೆ ವೇದಿಕೆಯಲ್ಲಿದ್ದ ಶಾಸಕರಾದ ಸಿ.ಟಿ.ರವಿ ಮತ್ತು ಎಚ್.ಡಿ. ತಮ್ಮಯ್ಯ ಅವರಿಗೆ ಮನವಿ ಮಾಡಿದರು.

    ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಮಾತನಾಡಿ ನಗರದಲ್ಲಿ ಸರ್ಕಾರಿ ನೌಕರರ ಭವನದ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ಒದಗಿಸಿದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ೫೭೯ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.

    ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲೆ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ರಾಜ್ಯ ಖಜಾಂಚಿ ವಿ.ವಿ. ಶಿವರುದ್ರಯ್ಯ, ಗೌರವಾಧ್ಯಕ್ಷ ಎಸ್.ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಹಿರಿಯ ಉಪಾಧ್ಯಕ್ಷರಾದ ಸುರೇಶ ಸಿ.ಶಡಶ್ಯಾಳ, ಆರ್.ಮೋಹನ್‌ಕುಮಾರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ ಉಪಸ್ಥಿತರಿದ್ದರು

    Swamiji’s advice to the youth to stay away from bad habits repeated by Dr. Basava

  • 2 ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನವೀಕರಣ

    2 ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನವೀಕರಣ

    ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ನವೀಕರಣಗೊಳಿಸಲಾಗುವುದೆಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

    ಅವರು ಇಂದು ನಗರದ ಅಂಬೇಡ್ಕರ್ ಭವನ ನವೀಕರಣ ಸಂಬಂಧ ಅಧಿಕಾರಿಗಳು ಹಾಗೂ ಶೋಷಿತ ವರ್ಗದ ಸಂಘಟನೆಗಳ ಪ್ರಮುಖರೊಂದಿಗೆ ಭೇಟಿಮಾಡಿ ನಂತರ ಮಾತನಾಡಿ ರಾಜ್ಯಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪನವರ ನೇತೃತ್ವದಲ್ಲಿ ನಗರದ ಹೃದಯ ಭಾಗದಲ್ಲಿರುವ ಅಂಬೇಡ್ಕರ್ ಭವನ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ೨ ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದರು.

    ಶೋಷಿತ ವರ್ಗದ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿ ಚರ್ಚಿಸಲಾಗಿದ್ದು, ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಂಬೇಡ್ಕರ್ ಭವನ ನಿರ್ವಹಣೆ ಮತ್ತು ಅನುದಾನವನ್ನು ಸದ್ಭಳಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ಮಾಡಲಾಗುವುದೆಂದು ಹೇಳಿದರು.

    ಸುಸಜ್ಜಿತ ಶೌಚಾಲಯ, ಸ್ವಚ್ಛತೆ, ಅಡುಗೆ ಮನೆ, ಸಿಸಿ ಟಿವಿ ಮುಂತಾದವುಗಳನ್ನು ಅಳವಡಿಸಲಾಗುವುದು. ನಗರದ ಹೊರಭಾಗದಲ್ಲಿ ೫-೧೦ ಎಕರೆ ಜಾಗವನ್ನು ಜಿಲ್ಲಾಡಳಿತ ಗುರ್ತಿಸಿದ್ದು, ಸಧ್ಯದಲ್ಲೇ ಜಿಲ್ಲಾಮಟ್ಟದ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಥವಾ ಬುದ್ಧ ವಿಹಾರ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

    ವಕೀಲ ಅನಿಲ್‌ಕುಮಾರ್ ಮಾತನಾಡಿ, ಈ ಅಂಬೇಡ್ಕರ್ ಭವನವನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಿ ಬಡವರ ಅನುಕೂಲಕ್ಕೆ ಸದ್ಭಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

    ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಮಾತನಾಡಿ, ನಗರದ ಅಂಬೇಡ್ಕರ್ ಭವನ ತುಂಬಾ ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ಅನೇಕ ವರ್ಷಗಳ ಹೋರಾಟ ಇಂದು ಫಲಿಸಿದೆ. ಶಾಸಕ ಹೆಚ್.ಡಿ. ತಮ್ಮಯ್ಯನವರ ಪರಿಶ್ರಮದ ಫಲವಾಗಿ ರಾಜ್ಯಸರ್ಕಾರದಿಂದ ೨ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

    ಇಂದು ನಡೆದ ಸಭೆಯಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗಿದ್ದು, ಶೋಷಿತ ಸಮುದಾಯಕ್ಕೆ ಈ ಭವನ ಮುಂದೆ ಅನುಕೂಲವಾಗಲಿದೆ ಎಂದರು.

    ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಭವನ ನವೀಕರಣಗೊಳ್ಳುತ್ತಿರುವುದು ಶೋಷಿತರು, ಬಡವರು, ಅಂಬೇಡ್ಕರ್ ಅನುಯಾಯಿಗಳು ಹಾಗೂ ಎಲ್ಲಾ ವರ್ಗದ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ ಅವರು, ಶಾಸಕರ ಮುಂದಿನ ಜೀವನ ಉಜ್ವಲವಾಗಿ ಬೆಳೆಯಲಿ, ರಾಜಕೀಯವಾಗಿ ಪ್ರಜ್ವಲಿಸಲಿ ಎಂದು ಶುಭಹಾರೈಸಿದರು.

    Ambedkar Bhavan to be renovated at a cost of Rs 2 crore

  • ಅ.2 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ

    ಅ.2 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ

    ಚಿಕ್ಕಮಗಳೂರು: ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮವಸ್ತ್ರ ವಿತರಿಸಿ ಮಾತನಾಡಿದರು.

    ಈ ಯೋಜನೆಯಡಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೪೦ ಅಂಗನವಾಡಿ ಕೇಂದ್ರಗಳನ್ನು ಗುರ್ತಿಸಿದ್ದು, ಈ ಅಂಗನವಾಡಿ ಕೇಂದ್ರಗಳಿಗೆ ಟಿವಿ, ಪೆನ್‌ಡ್ರೈವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಕ್ಕೆ ಆಗಮಿಸುವ ೩-೬ ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.

    ಪ್ರತಿ ವರ್ಷದಂತೆ ತಾಲ್ಲೂಕಿನ ೪೦೭ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡಿದ ಅವರು, ಜೊತೆಗೆ ಇತರ ಪರಿಕರಗಳನ್ನು ನೀಡಲಾಗುವುದು. ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುವುದೆಂದರು.

    ಅಕ್ಟೋಬರ್.೨ ಕ್ಕೆ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಿ ೫೦ ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲ್ಲೂಕಿನ ೪೭ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದರು.

    ಈ ಸಂಬಂಧ ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. ೪-೫ ವರ್ಷದ ಮಕ್ಕಳಿಗೆ ಎಲ್‌ಕೆಜಿ, ೫-೬ ವರ್ಷದ ಮಕ್ಕಳಿಗೆ ಯುಕೆಜಿ ತರಗತಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.

    ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು, ಅಂಗನವಾಡಿ ಫಲಾನುಭವಿಗಳಿಗೆ ಈ ಕಿಟ್ಟನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು.

    ಮೊದಲಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಸ್ವಾಗತಿಸಿ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು ೨೦೨೫ ರ ಅಕ್ಟೋಬರ್ ೨ ರಂದು ವಿದ್ಯುಕ್ತವಾಗಿ ಸರ್ಕಾರದ ಆದೇಶದಂತೆ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳದರು.

    ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್, ಎಸಿಡಿಪಿಓ ರೂಪಾ ಕುಮಾರಿ, ವಸಂತ ಕುಮಾರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.

    LKG-UKG classes to start in Anganwadi centers from October 2

  • ಬೀದಿನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ

    ಬೀದಿನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ

    ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ನಗರ ಮತ್ತು ತಾಲ್ಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಉಪಟಳ ಹಾಗೂ ಬಿಡಾಡಿ ದನಗಳ ತೊಂದರೆಗಳ ಬಗ್ಗೆ ಸಾರ್ವಜನಿಕರಿಂದ ನಗರಸಭೆ ಮತ್ತು ತಾಲ್ಲೂಕು ಪಂಚಾಯಿತಿಗೆ ಹಲವಾರು ದೂರು ಬಂದ ಹಿನ್ನೆಲೆಯಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದರು.

    ಕಸಬಾ ಹೋಬಳಿ ಇಂದಾವರ ಗ್ರಾಮದ ಸರ್ವೆ ನಂ.೩೬ ರಲ್ಲಿ ೧೫ ಎಕರೆ ಜಾಗವನ್ನು ಪಶುಸಂಗೋಪನೆ ಇಲಾಖೆಗೆ ಮೀಸಲಿಟ್ಟಿದ್ದು, ಅದರಲ್ಲಿ ಎರಡು ಎಕರೆ ಜಾಗದಲ್ಲಿ ಬೀದಿನಾಯಿಗಳನ್ನು ಪಳಗಿಸಿ ಚಿಕಿತ್ಸೆ ನೀಡಲು ಸಂಬಂಧಿಸಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.

    ಈ ಸಂಬಂಧ ಇನ್ನೊಂದು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಬೀದಿನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೀಡಿ ಪುನಹಾ ಸ್ವಸ್ಥಾನಕ್ಕೆ ಬೀದಿನಾಯಿಗಳನ್ನು ತಂದು ಬಿಡಲಾಗುವುದು ಎಂದು ತಿಳಿಸಿದರು. ವರ್ಷದಲ್ಲಿ ಎರಡು ಬಾರಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೀಡಿದರೆ ಬೀದಿನಾಯಿಗಳ ಸಂತತಿ ಕಡಿಮೆಯಾಗುತ್ತದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ಹೇಳಿದರು.

    ಬಿಡಾಡಿ ದನಗಳನ್ನು ಸಾಕಿರುವವರಿಗೆ ನಗರಸಭೆಯಿಂದ ರಸ್ತೆಗೆ ಬಿಡದಂತೆ ಸೂಚನೆ ಪತ್ರ ನೀಡಿದ್ದು, ನಿರ್ಲಕ್ಷ್ಯ ವಹಿಸಿ ದನಗಳನ್ನು ಬೀದಿಗೆ ಬಿಟ್ಟರೆ ಬೇರೆಡೆಗೆ ಸಾಗಿಸಲು ಕ್ರಮವಹಿಸಲಾಗುವುದೆಂದು ಎಚ್ಚರಿಸಿದರು. ನಗರದ ಕಲ್ಯಾಣ ಮಂಟಪಗಳ ಮುಂಭಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿ ಕಲ್ಯಾಣ ಮಂಟಪದ ಮಾಲಿಕರು ಸೆಕ್ಯುರಿಟಿ ಗಾರ್ಡ್ ಒಬ್ಬರನ್ನು ನೇಮಕ ಮಾಡಿಕೊಂಡು ದೂರದಲ್ಲಿ ವಾಹನ ನಿಲುಗಡೆಗೆ ಮುಂದಾಗಬೇಕೆಂದು ಮನವಿ ಮಾಡಿದರು.

    ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಬೀದಿನಾಯಿಗಳ ಉಪಟಳದಿಂದ ನಾಗರೀಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ಅವುಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗುವುದೆಂದು ಭರವಸೆ ನೀಡಿದರು.

    ಪೌರಾಯುಕ್ತ ಬಿ.ಸಿ ಬಸವರಾಜ್ ಮಾತನಾಡಿ, ಕಳೆದೆರಡು ವರ್ಷಗಳಿಂದ ೩೫೦೦ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಪ್ರಸಕ್ತ ವರ್ಷ ೨೦೦೦ ಬೀದಿನಾಯಿಗಳಿಗೆ ಶಸ್ತ್ರಚಿಕಿತ್ಸೆ ನೀಡಲು ಗುರಿಹೊಂದಲಾಗಿದ್ದು, ಸಧ್ಯದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕನಿಷ್ಟ ೬ ತಿಂಗಳಿಗೊಮ್ಮೆ ಶಸ್ತ್ರಚಿಕಿತ್ಸೆ ನೀಡಲಾಗುವುದೆಂದರು.

    ಇದೂವರೆಗೆ ಬೀದಿನಾಯಿಗಳ ನಿಯಂತ್ರಣಕ್ಕೆ ಟೆಂಡರ್ ಕರೆದಿದ್ದು, ಟೆಂಡರ್‌ದಾರರು ಭಾಗವಹಿಸದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆ.೧೧ ಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿ ಕಾರ್ಯಾದೇಶ ನೀಡಿ ಶಸ್ತ್ರಚಿಕಿತ್ಸೆಗೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.

    ಬಿಡಾಡಿ ದನಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಕ್ರಮ ಕೈಗೊಂಡಿದ್ದು, ಕಾಮಧೇನು ಗೋಶಾಲೆಗೆ ಟೆಂಡರ್ ನೀಡಲಾಗಿದೆ. ಬಿಡಾಡಿ ದನಗಳ ಸಾಕಾಣೆದಾರರಿಗೆ ನಗರಸಭೆಯಿಂದ ನೋಟೀಸ್ ನೀಡಿದ್ದು, ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಮೀನಾನಾಗರಾಜ್, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ, ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷಕರಾದ ನಾಗಪ್ಪ, ರಂಗಪ್ಪ, ಇಂಜಿನಿಯರ್ ಲೋಕೇಶ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಮೋಹನ್ ಕುಮಾರ್, ಪ್ರಾಣಿ ದಯಾ ಸಂಘದ ನಳಿನಾ ಡಿಸಾ ಮತ್ತಿತರರು ಭಾಗವಹಿಸಿದ್ದರು.

    Neutering surgery to control stray dogs

  • ಮಾದಕ ವಸ್ತು ಮಾರಾಟ ಕಂಡಲ್ಲಿ ಕಠಿಣ ಕ್ರಮಕ್ಕೆ ಸೂಚನೆ

    ಮಾದಕ ವಸ್ತು ಮಾರಾಟ ಕಂಡಲ್ಲಿ ಕಠಿಣ ಕ್ರಮಕ್ಕೆ ಸೂಚನೆ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ-ವ್ಯವಹಾರ ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜ್ಞಾನ ಜ್ಯೋತಿ ಟಿ.ಎಂ.ಎಸ್. ವಿದ್ಯಾ ಸಂಸ್ಥೆ, ಚಿಕ್ಕಮಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಟಿ.ಎಂ.ಎಸ್. ರೋಟರಿ ಹಾಲ್‌ನಲ್ಲ್ಲಿ ಡಾ.ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವ್ಯಸನಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲಾ ಪಂಚಾಯಿತಿಯ ಕೆ.ಡಿ.ಪಿ. ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಮಾದಕ ವಸ್ತು ಮಾರಾಟ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾವು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ ಅವರು, ದೇಶದ ದಿಕ್ಕನ್ನೇ ಬದಲಿಸುವ ಶಕ್ತಿ ಇರುವ ಯುವಜನತೆ ವ್ಯಸನಗಳಿಗೆ ಬಲಿಯಾದರೆ, ಅವರ ಕುಟುಂಬ, ಸಮಾಜ ಅಷ್ಟೇ ಅಲ್ಲ, ಇಡೀ ದೇಶವೇ ದಿಕ್ಕು ತಪ್ಪುತ್ತದೆ ಎಂದು ಹೇಳಿದರು.

    ಮಾದಕ ವ್ಯಸನಿಗಳಾದಲ್ಲಿ ಅವರ ವ್ಯಕ್ತಿಗತ ಜೀವನ ಮಾತ್ರವಲ್ಲ ಸಾಮಾಜಿಕ ಜೀವನದ ಮೇಲೂ ದುಷ್ಪರಿಣಾಮ ಬೀರುತ್ತದೆ. ಈ ಚಟಕ್ಕೆ ಬಿದ್ದವರು ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜಕ್ಕೆ ಮಾರಕವಾಗುತ್ತಾರೆ. ಈ ಹಿನ್ನೆಲೆಯಲ್ಲಿ ಸಂಸ್ಕಾರವಂತ ದೇಶದಲ್ಲಿ ಜನಿಸಿರುವ ನಾವು ಕ್ಷಣಿಕ ಸಂತೋಷ ಕೊಡುವ ಈ ಚಟದಿಂದ ದೂರ ಉಳಿಯಬೇಕು ಎಂದು ತಿಳಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಎಲ್ಲರ ಬದುಕಿನಲ್ಲಿ ಯೋಗ್ಯತೆ ಇರುತ್ತದೆ. ಆದರೆ ಯೋಗ ಮಾತ್ರ ಕೂಡಿಬಂದಲ್ಲಿ ಮಾತ್ರ ಅವಕಾಶವನ್ನು ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಲು, ಉತ್ತಮ ಉದ್ಯೋಗ ಮಾಡಲು ಎಲ್ಲಾ ಯೋಗ್ಯತೆಗಳನ್ನು ಹೊಂದಿದ್ದರೂ ಪ್ರಯತ್ನ ಮಾಡುವುದು ಅಗತ್ಯ. ಈ ದಿಸೆಯಲ್ಲಿ ನಮ್ಮ ಬದುಕಿಗೆ ಕೆಟ್ಟದ್ದರತ್ತ ಕಣ್ಣು ಹಾಯಿಸಲೂ ಬಾರದು. ಅದರಲ್ಲೂ ಮಾದಕ ವಸ್ತುಗಳ ವ್ಯಾಮೋಹಕ್ಕೆ ಒಳಗಾಗಬಾರದು. ಅಂಥವುಗಳನ್ನು ಕೆಟ್ಟದ್ದು ಎಂದು ಹೇಳುವ ಧೈರ್ಯವೂ ನಮ್ಮಲ್ಲಿ ಇರಬೇಕು. ಆ ಮೂಲಕ ಈ ಪೀಳಿಗೆಯನ್ನು ಉತ್ತಮ ಹಾದಿಗೆ ಒಯ್ಯುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

    ಡಾ.ಮಹಾಂತ ಶಿವಯೋಗಿಗಳ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ತ್ರಿವಿಧ ದಾಸೋಹಗಳಾದ ಜ್ಞಾನಕ್ಕೆ ಅನ್ನಕ್ಕೆ, ಅರಿವೆಗೆ ಒತ್ತುಕೊಟ್ಟು ಅನಾದಿ ಕಾಲದಿಂದಲೂ ಶ್ರಮಿಸುತ್ತಿರುವ ಅನೇಕ ವಿರಕ್ತ ಮಠಗಳು ಕರ್ನಾಟಕದಾದ್ಯಂತ ಇವೆ. ಅದೇ ಸಾಲಿನಲ್ಲಿ ಚಿತ್ತರಗಿಯ ಮಹಾಂತ ಶಿವಯೋಗಿಗಳ ಮಠವೂ ಒಂದು. ಬಸವಾದಿ ಶರಣರ ಆಶಯಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಂಕಲ್ಪ ಮತ್ತು ದೀಕ್ಷೆಯನ್ನು ಹೊತ್ತುಕೊಂಡು ಕಾರ್ಯೋನ್ಮುಖರಾಗಿರುವ ನಿಟ್ಟಿನಲ್ಲಿ ನಾವು ಮಹಾಂತ ಶಿವಯೋಗಿಗಳ ಜನ್ಮದಿನವನ್ನು ಆಚರಿಸುತ್ತಿದ್ದೇವೆ ಎಂದರು.

    ಡಾ.ಮಹಾಂತ ಶಿವಯೋಗಿಗಳು ತಮ್ಮ ಸಮಾಜಮುಖಿ ಕಾರ್ಯಗಳಿಂದ ಮಹಾತ್ಮರಾದವರು. ವ್ಯಸನಮುಕ್ತ ವ್ಯಕ್ತಿ, ಸಮಾಜ, ಕುಟುಂಬ ಹಾಗೂ ವ್ಯಸನಮುಕ್ತ ದೇಶವನ್ನು ಕಟ್ಟುವ ಕಾಯಕದಲ್ಲಿ ಅವರು ಮುಂಚೂಣಿಯಲ್ಲಿದ್ದರು. ಅವರ ಜಯಂತಿಯನ್ನು ಆಚರಣೆ ಮಾಡಲು ಸರ್ಕಾರವೇ ಆದೇಶ ನೀಡಿರುವುದು ಇದೇ ಕಾರಣಕ್ಕೆ. ಅವರು ತಮ್ಮ ಕಿರಿಯ ವಯಸ್ಸಿನಲ್ಲೇ ಆ ಮಠಕ್ಕೆ ಕಿರಿಯ ಸ್ವಾಮೀಜಿಯಾಗಿ ಪಟ್ಟಾಭಿಷಿಕ್ತರಾಗುತ್ತಾರೆ. ಕಾಶಿಯಲ್ಲಿ ಸಕಲ ವಿದ್ಯಾ ಪಾರಂಗತರಾಗಿದ್ದರು. ಉತ್ತರ ಕರ್ನಾಟಕದಲ್ಲಿ ಬರಗಾಲ ಬಂದಾಗ ಗೋಶಾಲೆಗಳು, ಗಂಜಿ ಕೇಂದ್ರಗಳು, ಮೇವಿನ ಕೇಂದ್ರಗಳನ್ನು ತೆರೆಯುವ ಮೂಲಕ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಧರ್ಮ, ಜಾತಿ, ಭಾಷೆ, ಪಂಥ, ದೇಶ ಎಲ್ಲವನ್ನೂ ಮೀರಿದ ಶಿವಯೋಗಿಗಳು ಎಂದು ಬಣ್ಣಿಸಿದರು.

    ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ತಜ್ಞ ಡಾ.ವಿನಯ್, ಯುವಜನತೆ ಮೊದಲಿಗೆ ಆಸೆ, ಕುತೂಹಲ ಹಾಗೂ ಒತ್ತಡಗಳಿಗೆ ಬಿದ್ದು ಮಾದಕ ವಸ್ತುಗಳ ಮೋಹಕ್ಕೆ ಒಳಗಾಗಿ ಮುಂದೆ ಅದು ಖುಷಿಗೂ, ಬೇಸರಕ್ಕೂ ಬಳಸುವ ಮೂಲಕ ವ್ಯಸನಿಗಳಾಗುತ್ತಾರೆ. ಕ್ಷಣಿಕವಾಗಿ ಮಿದುಳನ್ನು ಉದ್ದೀಪನಗೊಳಿಸುವ ಈ ಚಟಗಳಿಗೆ ದಾಸರಾದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಇಡೀ ಜೀವನವನ್ನು ಹಾಳು ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಮದ್ಯ, ತಂಬಾಕು ವಸ್ತುಗಳು, ಗಾಂಜಾ, ಕೊಕೇನ್, ಹೆರಾಯಿನ್ ಇವು ಮಾದಕ ವಸ್ತುಗಳಾಗಿದ್ದು, ಮಿದುಳು ಚುರುಕಾಗುತ್ತದೆ ಎನ್ನುವ ಕಾರಣಕ್ಕೆ ಯುವಜನರು ಬೇಗ ಅವುಗಳ ದಾಸರಾಗಿಬಿಡುತ್ತಾರೆ. ಉದ್ದೀಪನಗೊಳಿಸುವ ಈ ಚಟಗಳಿಗೆ ದಾಸರಾದರೆ ಮತ್ತೆ ಅವುಗಳಿಂದ ಹೊರ ಬರುವುದು ಕಷ್ಟ. ಚಟಕ್ಕೆ ಒಳಗಾದವರು ಆರೋಗ್ಯ ಇಲಾಖೆಯ ಸಹಾಯವಾಣಿ ಮೂಲಕ ನೆರವು ಪಡೆಯಬಹುದು. ಅಂಥವರು ಒಮ್ಮೆ ಆಸ್ಪತ್ರೆಗೆ ಭೇಟಿ ನೀಡಿ ಈ ಸಂಬಂಧಿತ ರೋಗಿಗಳ ಸ್ಥಿತಿಯನ್ನು ಅವಲೋಕಿಸಬೇಕು ಎಂದು ತಿಳಿಸಿದರು.

    ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ನೇತ್ರಾ ವೆಂಕಟೇಶ್ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲ, ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅಗತ್ಯ. ಅದರಿಂದ ಮಾತ್ರ ದೇಶಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲು ಸಾಧ್ಯ ಎಂದರು.

    ಟೌನ್ ಮಹಿಳಾ ಸಮಾಜದ ಕಾರ್ಯದರ್ಶಿ ಶುಭದಾ, ಜಿಲ್ಲಾ ಕೇಂದ್ರ ಗ್ರಂಥಾಲಯಾಧಿಕಾರಿ ಉಮೇಶ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ ಉಪಸ್ಥಿತರಿದ್ದರು. ಜ್ಞಾನಜ್ಯೋತಿ ಟಿ.ಎಂ.ಎಸ್.ಪದವಿ ಕಾಲೇಜಿನ ಪ್ರಾಂಶುಪಾಲ ಇಂದ್ರೇಶ್ ಸ್ವಾಗತಿಸಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ಹೆಚ್.ಬಿ.ಮಹೇಶಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ಇದೇ ಸಂದರ್ಭದಲ್ಲಿ ಅಂಬಳೆಯ ರೇಣುಕಾಮಾತೆ ತೊಗಲುಗೊಂಬೆ ಕಲಾ ಸಂಘದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ತೊಗಲು-ಗೊಂಬೆಯಾಟ ಪ್ರದರ್ಶಿಸಲಾಯಿತು.

    Strict action will be taken if drug sales are found

  • ಆ.3 ರಂದು ‘ಲಕ್ಷ್ಮಣ್ ತುಕಾರಾಂ ಗೋಲೆ’ ನಾಟಕ ಪ್ರದರ್ಶನ

    ಆ.3 ರಂದು ‘ಲಕ್ಷ್ಮಣ್ ತುಕಾರಾಂ ಗೋಲೆ’ ನಾಟಕ ಪ್ರದರ್ಶನ

    ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’ ಎಂಬ ವಿಶೇಷ ಸಾಮಾಜಿಕ ನಾಟಕ ಪ್ರದರ್ಶನ ಆ.೩ ರಂದು ಭಾನುವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಸಂಜೆ ೬ ಗಂಟೆಗೆ ಏರ್ಪಡಿಸಲಾಗಿದೆ.

    ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಶಾಕಿರಣ ಅಂಧಮಕ್ಕಳ ಪಾಠಶಾಲೆಯ ಅಧ್ಯಕ್ಷರಾದ ಡಾ. ಜೆ.ಪಿ. ಕೃಷ್ಣೇಗೌಡ ಅವರು ಬಸವತತ್ವ ಪೀಠ, ಕಲಾ ಸೇವಾ ಸಂಘ, ಆಶಾಕಿರಣ ಚಾರಿಟಬಲ್ ಟ್ರಸ್ಟ್, ಆದಿಚುಂಚನಗಿರಿ ವಿಶ್ವ ವಿದ್ಯಾನಿಲಯ, ಆಶ್ರಯ ಫೌಂಡೇಶನ್, ಕಲ್ಕಟ್ಟೆ ಪುಸ್ತಕದ ಮನೆ, ಜಿ.ಸಿ ಅಂತರಾಷ್ಟ್ರೀಯ ಸಂಸ್ಥೆ, ಪೂರ್ವಿ ಸುಗಮ ಸಂಗೀತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.

    ಈ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಬಸವಮಂದಿರದ ಡಾ. ಬಸವ ಮರುಳುಸಿದ್ದ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಕಲಾ ಸೇವಾ ಸಂಘದ ಅಧ್ಯಕ್ಷ ಕೆ. ಮೋಹನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಡಾ. ಮಂಜುಳ ಉಲ್ಲಳ್ಳಿ, ಡಾ. ಸಿ.ಕೆ. ಸುಬ್ರಾಯ, ಡಾ. ರಮೇಶ್, ಕಾಂತೇಶ್ ಕದರ ಮಂಡಲಗಿ, ಲಯನ್ ಕುಮಾರ್, ಡಾ. ವರ್ಷ ಅಭಿಷೇಕ್, ನಾಗರಾಜ್‌ರಾವ್ ಕಲ್ಕಟ್ಟೆ, ಪ್ರದೀಪ್ ಸಿ.ಬಿ. ಎಂ.ಎಸ್ ಸುಧೀರ್ ಭಾಗವಹಿಸಲಿದ್ದಾರೆಂದು ಹೇಳಿದರು.

    ಈ ನಾಟಕವು ಗಾಂಧಿವಾದಿ ಲಕ್ಷ್ಮಣ್ ತುಕಾರಾಂ ಗೋಲೆ ಅವರ ಜೀವನಾಧಾರಿತ ಕಥೆಯನ್ನೊಳಗೊಂಡಿದ್ದು, ವಿಶೇಷವಾಗಿ ಸ್ವತಹಾ ಗೋಲೆಯವರೇ ಉಪಸ್ಥಿತರಿದ್ದು ನಾಟಕವನ್ನು ವೀಕ್ಷಿಸಲಿದ್ದಾರೆಂದರು. ಅದೇ ದಿನ ಮಧ್ಯಾಹ್ನ ೧೨ ಗಂಟೆಗೆ ಇಲ್ಲಿನ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಇದೇ ನಾಟಕವನ್ನು ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಯುವತಿಯೋರ್ವಳನ್ನು ರೌಡಿಯಿಂದ ರಕ್ಷಿಸಲು ಹೋದ ಸಂದರ್ಭದಲ್ಲಿ ಆತನ ಕಿವಿಯನ್ನು ಕತ್ತರಿಸಿದ ಘಟನೆಯಿಂದ ಜೈಲು ಸೇರಿ ಮುಂದೆ ಪಾತಕ ಲೋಕದ ವಿವಿಧ ಮಜಲುಗಳನ್ನು ಪರಿಚಯ ಮಾಡಿಕೊಂಡು ರೇಜರ್ ಲಕನ್ ಎಂದೇ ಕುಖ್ಯಾತಿ ಪಡೆದು ೭ ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದ ಇವರು ಅಲ್ಲಿ ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿ ಮನಃಪರಿವರ್ತನೆಗೊಂಡು ಸನ್ನಡತೆಯ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳಿಗೆ ಬಿಡುಗಡೆಯಾದ ಲಕ್ಷ್ಮಣ್ ತುಕಾರಾಂ ಗೋಲೆ, ಸಮಾಜಸೇವೆ, ಯೋಗ, ಧ್ಯಾನ, ಕೈದಿಗಳ ಮನಃಪರಿವರ್ತನೆಯಲ್ಲಿ ತೊಡಗಿದ್ದಾರೆಂದು ತಿಳಿಸಿದರು.

    ೨೦೧೫ ರ ಜಿಂದಗಿ ಲೈಫ್ ರಾಷ್ಟ್ರೀಯ ಪ್ರಶಸ್ತಿಗೂ ಭಾಜನರಾದ ಇವರು, ನಾಟಕ ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಕಲಾ ಸೇವಾ ಸಂಘದ ಅಧ್ಯಕ್ಷ ಕೆ. ಮೋಹನ್, ಲಯನ್ಸ್ ಅಧ್ಯಕ್ಷ ಕುಮಾರ್ ಸಿ.ಎನ್, ಪ್ರಧಾನ ಕಾರ್ಯದರ್ಶಿ ಗೋಪಿಕೃಷ್ಣ, ಲಯನ್ ಜಿ.ರಮೇಶ್, ಎಂ.ಎಸ್. ಸುಧೀರ್ ಉಪಸ್ಥಿತರಿದ್ದರು.

    Lakshman Tukaram Gole play performance on August 3rd

  • ಹಕ್ಕಿಮಕ್ಕಿ ಗ್ರಾಮದಲ್ಲಿ ಮಗನಿಂದ ತಾಯಿಯ ಹತ್ಯೆ

    ಹಕ್ಕಿಮಕ್ಕಿ ಗ್ರಾಮದಲ್ಲಿ ಮಗನಿಂದ ತಾಯಿಯ ಹತ್ಯೆ

    ಆಲ್ದೂರು: ತಾಯಿಯನ್ನು ಮಗನೇ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಪವನ್ (28) ತಾಯಿಯನ್ನ ಕೊಂದ ಪಾಪಿ ಮಗ. ತಾಯಿ ಭವಾನಿ (52) ಅವರನ್ನು ಬೆಂಕಿ ಹಾಕಿ ಅರೆಬರೆ ಸುಟ್ಟು ಮನೆಯಲ್ಲೇ ಮಲಗಿದ್ದಾನೆ ಎಂದು ತಿಳಿದುಬಂದಿದೆ.

    ಇವರದು ಒಂಟಿ ಮನೆಯಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಟ್ಟದ ಮೇಲೆ ಇದ್ದು, ಜನವಸತಿ ಪ್ರದೇಶದಿಂದ ಹೊರಗೆ ವಾಸವಾಗಿದ್ದರು ಎನ್ನಲಾಗಿದೆ. ಮನೆಯಲ್ಲಿ ತಂದೆ ತಾಯಿ ಮಗ ಮೂವರು ವಾಸವಾಗಿದ್ದರು ಎನ್ನಲಾಗಿದೆ.

    ತಂದೆ ಮಗ ಇಬ್ಬರು ಮದ್ಯವ್ಯಸನಿಗಳಾಗಿದ್ದರು ಎನ್ನಲಾಗಿದೆ. ಪ್ರಕರಣದ ಬಗ್ಗೆ ತಂದೆಯೇ ಆಲ್ಲೂರು ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

    ಬುಧವಾರ ತಡರಾತ್ರಿಯಲ್ಲಿ ಪೊಲೀಸರು ಮತ್ತು ಸ್ಥಳೀಯರು ಮೃತದೇಹವನ್ನು ಕಿಲೋಮೀಟರ್ ಗಟ್ಟಲೇ ಹೊತ್ತು ತಂದಿದ್ದು ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಆಲ್ಲೂರು ಪಿಎಸ್‌ಐ ಹಾಗೂ ಇನ್ಸ್‌ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪವನ್‌ನನ್ನು ಬಂಧಿಸಿದ್ದಾರೆ.

    Mother murdered by son in Hakkimaki village

  • ಫುಟ್‌ಪಾತ್ ಮೇಲಿನ ವಸ್ತು ತೆರವಿಗೆ ನಿರ್ಧಾಕ್ಷಿಣ್ಯ ಕ್ರಮ ವಹಿಸಿ

    ಫುಟ್‌ಪಾತ್ ಮೇಲಿನ ವಸ್ತು ತೆರವಿಗೆ ನಿರ್ಧಾಕ್ಷಿಣ್ಯ ಕ್ರಮ ವಹಿಸಿ

    ಚಿಕ್ಕಮಗಳೂರು: ನಗರಸಭೆಯಿಂದ ೧೫ ದಿನಗಳ ಮುನ್ನವೇ ಫುಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಉಲ್ಲಂಘಿಸಿರುವ ವರ್ತಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಸೂಚನೆ ನೀಡಿದರು.

    ಅವರು ಇಂದು ನಗರಸಭೆಯಿಂದ ಏರ್ಪಡಿಸಲಾಗಿದ್ದ ನಗರದ ಮಲ್ಲಂದೂರು ರಸ್ತೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ ನಗರಸಭೆಯಿಂದ ಪರವಾನಗಿ ಪಡೆಯದೆ ಅನಧಿಕೃತವಾಗಿ ತರಕಾರಿ ಸೇರಿದಂತೆ ಹೂವು, ಹಣ್ಣು ಇನ್ನಿತರೆ ಅಂಗಡಿಗಳನ್ನು ನಡೆಸುತ್ತಿರುವ ವರ್ತಕರು ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಡಬಾರದು ಎಂದು ಹೇಳಿದರು.

    ಪರವಾನಗಿ ಪಡೆಯದೆ ಎಷ್ಟು ವರ್ಷಗಳಾಗಿವೆ ಅಲ್ಲಿಂದ ಇಲ್ಲಿಯವರೆಗೆ ವರ್ತಕರಿಗೆ ದಂಡ ಸಹಿತ ಶುಲ್ಕ ವಿಧಿಸಿ ಪರವಾನಗಿ ನೀಡಬೇಕು ಹಾಗೂ ಖಾಲಿ ನಿವೇಶನಗಳಲ್ಲಿ ಗಿಡಘಂಟಿಗಳು ಬೆಳೆದಿದ್ದರೆ ಸಂಬಂಧಪಟ್ಟ ಮಾಲಿಕರಿಗೆ ಸೂಚನೆ ನೀಡಿ ಸ್ವಚ್ಚತೆ ಮಾಡಿಕೊಳ್ಳಬೇಕೆಂದು ತಾಕೀತು ಮಾಡಿ ಎಂದು ಸಲಹೆ ನೀಡಿದರು.

    ಕಸವನ್ನು ನಿಗದಿತ ಸ್ಥಳದಲ್ಲಿ ಹಾಕದೆ ಎಲ್ಲೆಂದರಲ್ಲಿ ಹಾಕಿ ನಗರದ ಸೌಂದಂiiಕ್ಕೆ ಧಕ್ಕೆ ತರಲಾಗುತ್ತಿದೆ. ಈ ಬಗ್ಗೆ ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ, ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.

    ಲಾಡ್ಜ್‌ಗಳ ನಿರ್ಮಾಣಕ್ಕೆ ನಗರಸಭೆಯಿಂದ ಪರವಾನಗಿ ನೀಡುವಾಗ ನಿಬಂಧನೆಗಳನ್ನು ವಿಧಿಸಿದ್ದು, ಕಟ್ಟಡ ಪೂರ್ಣಗೊಂಡ ಬಳಿಕ ಪಾರ್ಕಿಂಗ್‌ಗೆ ಮೀಸಲಿಟ್ಟಿದ್ದ ಜಾಗದಲ್ಲಿ ಪೆಟ್ಟಿಗೆ ಅಂಗಡಿಗೆ ಅನುಮತಿ ನೀಡಿ ವ್ಯಾಪಾರ ಮಾಡುತ್ತಿದ್ದಾರೆಂದು ದೂರಿದರು.

    ಸಧ್ಯದಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆರ್‌ಟಿಓ ಪೊಲೀಸರು ಮತ್ತು ಪರಿಸರ ಇಲಾಖೆಯ ಮುಖ್ಯಸ್ಥರನ್ನೊಳಗೊಂಡ ಸಭೆ ನಡೆಸಿ ಸೂಕ್ತ ಕ್ರಮ ವಹಿಸುತ್ತೇವೆ ಎಂದ ಅವರು, ಹಾಲಿ ಇರುವ ರಸ್ತೆಯನ್ನು ಸ್ವಚ್ಚವಾಗಿಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.

    ಪೌರಕಾರ್ಮಿಕರ ಹುದ್ದೆ ಭರ್ತಿಯಾಗದ ಹೊರತು ಸಮಸ್ಯೆ ಇತ್ಯರ್ಥವಾಗುವುದಿಲ್ಲ, ನಗರದಲ್ಲಿ ಅಂಗಡಿಗಳು ಹೆಚ್ಚಾದಂತೆ ಕಸ ವಿಲೇವಾರಿ ಕಷ್ಟವಾಗುತ್ತಿದೆ. ಹಾಲಿ ೨೦೩ ಪೌರ ಕಾರ್ಮಿಕರ ಹುದ್ದೆಗೆ ಕೇವಲ ೧೭೫ ಜನ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆಂದು ಹೇಳಿದರು.

    ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ವೈದ್ಯರು, ದಾದಿಯರು, ಪೌರ ಕಾರ್ಮಿಕರು, ಶಿಕ್ಷಕರನ್ನು ಭರ್ತಿಮಾಡುವಂತೆ ಆದ್ಯತೆ ನೀಡಬೇಕೆಂದು ಆಗ್ರಹಿಸುವುದಾಗಿ ಭರವಸೆ ನೀಡಿದರು.

    ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಸಾರ್ವಜನಿಕರ ಸಂಚಾರಕ್ಕೆ ರಸ್ತೆಬದಿ ಫುಟ್‌ಪಾತ್ ಮೇಲೆ ವಸ್ತುಗಳನ್ನಿಟ್ಟು ವ್ಯಾಪಾರ ಮಾಡುತ್ತಿರುವುದರಿಂದ ತೊಂದರೆಯಾಗುತ್ತಿದೆ ಎಂದು ಬಂದ ದೂರಿನ ಹಿನ್ನೆಲೆಯಲ್ಲಿ ಇಂದು ಫಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವ ಮೂಲಕ ವರ್ತಕರಿಗೆ ಕಡಕ್ ಸೂಚನೆ ನೀಡಲಾಗಿದೆ ಎಂದರು.

    ಸದಸ್ಯ ಎ.ಸಿ. ಕುಮಾರ್‌ಗೌಡ ಮಾತನಾಡಿ, ನಗರವನ್ನು ಸುಂದರ ಮತ್ತು ಸ್ವಚ್ಚ ನಗರವನ್ನಾಗಿ ಮಾಡಬೇಕೆಂಬ ಉದ್ದೇಶದೊಂದಿಗೆ ನಗರಸಭೆಯಿಂದ ಕಳೆದ ಒಂದು ತಿಂಗಳಿನಿಂದ ಸಂತೆ ಮಾರ್ಕೆಟ್ ಸ್ವಚ್ಚತೆ ಹಾಗೂ ಎಂಜಿ ರಸ್ತೆ, ಮಲ್ಲಂದೂರು ರಸ್ತೆಯ ಫುಟ್‌ಪಾತ್ ಮೇಲೆ ವಸ್ತುಗಳನ್ನಿಡುತ್ತಿರುವುದರಿಂದ ತೆರವುಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಲಾಗಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಗೋಪಿ, ಲಕ್ಷ್ಮಣ್, ಪೌರಾಯುಕ್ತ ಬಿ.ಸಿ ಬಸವರಾಜು, ಆರೋಗ್ಯ ನಿರೀಕ್ಷಕರಾದ ನಾಗಪ್ಪ, ಅಣ್ನಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

    Take decisive action to clear the debris from the footpath.

  • ಮಾನವ ಕಳ್ಳಸಾಗಣೆ ತಡೆಗೆ ಪ್ರಾಮಾಣಿಕ ಪ್ರಯತ್ನ ಅಗತ್ಯ

    ಮಾನವ ಕಳ್ಳಸಾಗಣೆ ತಡೆಗೆ ಪ್ರಾಮಾಣಿಕ ಪ್ರಯತ್ನ ಅಗತ್ಯ

    ಚಿಕ್ಕಮಗಳೂರು: ಮಾನವ ಕಳ್ಳಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಈ ಜಿಲ್ಲೆಯನ್ನು ಮುಕ್ತಗೊಳಿಸಲು ಪ್ರಾಮಾಣಿಕವಾದ ಪ್ರಯತ್ನದ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ ಹೇಳಿದರು.

    ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಇಂದು ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಮಹಿಳೆಯರು, ಮಕ್ಕಳು ಅಬಲರಾಗಿದ್ದು, ಪ್ರತಿರೋಧವೊಡ್ಡಲು ಅಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಆಮಿಷವೊಡ್ಡುವ ಮುಖಾಂತರ ಅವರನ್ನು ಕರೆದೊಯ್ದು ಜೀತ ಪದ್ಧತಿ ಇಲ್ಲವೆ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನ ಕೃತ್ಯ ನಿರಂತರವಾಗಿ ನಡೆಯುತ್ತಿದೆ. ಮಕ್ಕಳನ್ನು ಸಹ ಕಳ್ಳಸಾಗಣೆ ಮಾಡಿ ಬಾಲಕಾರ್ಮಿಕ ಪದ್ಧತಿಗೆ ದೂಡುವಂತಹ ಪದ್ಧತಿ ನಡೆಯುತ್ತಿದೆ. ಇದರ ವಿರುದ್ಧ ವಿಶ್ವಾದ್ಯಂತ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಜನರಲ್ಲಿ ಈ ಬಗ್ಗೆ ಅರಿವು ಮೂಡಿಸುವುದು ಈ ಜಾಥಾದ ಪ್ರಮುಖ ಉದ್ದೇಶ ಎಂದರು.

    ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ ಮಾನವ ಕಳ್ಳಸಾಗಣೆ ಹೆಚ್ಚುತ್ತಲೇ ಇದೆ. ಲೈಂಗಿಕ ದೌರ್ಜನ್ಯ ಎಸಗುವುದಕ್ಕಾಗಿ, ಅಂಗಾಂಗಗಳನ್ನು ಪಡೆಯುವುದಕ್ಕಾಗಿ ಹಾಗೂ ಗುಲಾಮಗಿರಿಗಾಗಿ ಮತ್ತು ಹತ್ತು ಹಲವು ಕಾರಣಗಳಿಗಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಲೇ ಬಂದಿದೆ. ಜೊತೆಗೆ ಮಹಿಳೆಯರನ್ನು ಮತ್ತು ಮಕ್ಕಳನ್ನು ವಸ್ತುಗಳು ಅಥವಾ ಪ್ರಾಣಿಗಳ ರೀತಿಯಲ್ಲಿ ವಿದೇಶಗಳಿಗೆ ಮಾರಾಟ ಮಾಡುವ ದಂಧೆಯೂ ಅವರ ಶೋಷಣೆಗೆ ಕಾರಣವಾಗಿದೆ.

    ಈ ಪರಿಸ್ಥಿತಿ ಇರಬಾರದು. ಈ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದು ಒಂದು ದಿನಕ್ಕೆ ಸೀಮಿತವಾಗಬಾರದು. ಜನರು ನಿರಂತರವಾಗಿ ಜಾಗೃತರಾಗಿರಬೇಕು. ಹಾಗೆಯೇ ಈ ಶೋಷಣೆ ನಿಲ್ಲಬೇಕು. ಈ ನಿಟ್ಟಿನಲ್ಲಿ ಎಲ್ಲರ ಕಣ್ಣು ಮತ್ತು ಹೃದಯಗಳು ತೆರೆಯಲಿ ಎಂದು ಅವರು ಆಶಿಸಿದರು.

    ಸ್ವಾಗತಿಸಿದ ಶಿಶು ಅಭಿವೃದ್ಧಿ ಅಧಿಕಾರಿ ರಂಗನಾಥ್ ಮಾತನಾಡಿದರು. ಉಪವಿಭಾಗಾಧಿಕಾರಿಗಳಾದ ಸುಂದರೇಶ್, ಆರಕ್ಷಕ ಹೆಚ್ಚುವರಿ ಅಧೀಕ್ಷಕ ಸಿ.ಟಿ.ಜಯಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲವತ್ತಿ, ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಂತೋಷ್, ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.

    ಇದೇ ಸಂದರ್ಭದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ತಾಲ್ಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಜಾಥಾ ನಡೆಯಿತು.

    Sincere efforts needed to prevent human trafficking

  • ಪರಿಶಿಷ್ಟರ ಕಲ್ಯಾಣ ಅನುದಾನ ವರ್ಗಾವಣೆ ಮಾಡುವ ನಿರ್ಧಾರ ಕೈ ಬಿಡುವಂತೆ ಜಿಲ್ಲಾ ಬಿಜೆಪಿ ಆಗ್ರಹ

    ಪರಿಶಿಷ್ಟರ ಕಲ್ಯಾಣ ಅನುದಾನ ವರ್ಗಾವಣೆ ಮಾಡುವ ನಿರ್ಧಾರ ಕೈ ಬಿಡುವಂತೆ ಜಿಲ್ಲಾ ಬಿಜೆಪಿ ಆಗ್ರಹ

    ಚಿಕ್ಕಮಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ ಮೀಸಲಿಟ್ಟಿದ್ದ ಅನುದಾನದಲ್ಲಿ ೧೧,೮೯೬.೮೪ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗೆ ವರ್ಗಾವಣೆ ಮಾಡಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಕೈಬಿಡಬೇಕು ಎಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ತಿಳಿಸಿದ್ದಾರೆ.

    ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಕಲ್ಯಾಣಕ್ಕಾಗಿ ಈ ಸಾಲಿನಲ್ಲಿ ತೆಗೆದಿರಿಸಿದ್ದ ೪೨,೦೧೭.೫೧ ಕೋಟಿ ರೂ.ಗಳ ಅನುದಾನದಲ್ಲಿ ೧೧,೮೯೬.೮೪ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಲು ಸರ್ಕಾರ ತೆಗೆದುಕೊಂಡಿರುವ ಕ್ರಮ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನರಿಗೆ ಮಾಡುವ ಅನ್ಯಾಯವಾಗಿದೆ. ಸರ್ಕಾರದ ಈ ಕ್ರಮವನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಅವರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ೨೦೨೩ ನೆಯ ಸಾಲಿನಲ್ಲಿ ೧೧,೧೧೪ ಕೋಟಿ ರೂ.ಗಳನ್ನು ಮತ್ತು ೨೦೨೪ ನೆಯ ಸಾಲಿನಲ್ಲಿ ೧೪,೨೮೨ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ಮೂಲಕ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಅದೇ ಚಾಳಿಯನ್ನು ಈ ಬಾರಿಯೂ ಸರ್ಕಾರ ೧೧,೮೯೬ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ಅಂತಿಮ ಆದೇಶ ಹೊರಡಿಸಲು ಸಿದ್ಧತೆ ನಡೆಸಿರುವುದು ಅವೈಜ್ಞಾನಿಕವಾಗಿದೆ ಎಂದು ಅವರು ಹೇಳಿದ್ದಾರೆ.

    ಪರಿಶಿಷ್ಟರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸರ್ವತೋಮುಖ ವಿಕಾಸಕ್ಕಾಗಿ ಮೀಸಲಿಟ್ಟಿದ್ದ ಅನುದಾನವನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವುದರೊಂದಿಗೆ ಗ್ಯಾರಂಟಿ ಅನುಷ್ಠಾನದಲ್ಲೂ ಸರ್ಕಾರ ಜಾತಿಯತೆ ಮಾಡುತ್ತಿದೆ ಎಂದು ಟೀಕಿಸಿರುವ ಅವರು, ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರಿಗೆ ಪ್ರತ್ಯೇಕ ಅನುದಾನ ಮೀಸಲಿಡುತ್ತೇವೆ ಎಂದು ಹೇಳಿರಲಿಲ್ಲ. ಆದರೆ, ಕಳೆದ ಎರಡು ವರ್ಷಗಳಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದಲ್ಲೂ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

    ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ವಾಲ್ಮಿಕಿ ಸೇರಿದಂತೆ ವಿವಿಧ ಜನಾಂಗಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡದೆ ಕೇವಲ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಮಾತ್ರ ವರ್ಗಾವಣೆ ಮಾಡುತ್ತಿರುವುದನ್ನು ಗಮನಿಸಿದಾಗ ತಾರತಮ್ಯದ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗದ ನಾಯಕರು ಅಸಹಾಯಕರಾಗಿದ್ದಾರೆ ಎಂಬುದರ ಸಂಕೇತವಾಗಿದೆ ಎಂದು ಹೇಳಿದ್ದಾರೆ.

    ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ ವೋಟಿನ ರಾಜಕಾರಣ ಮಾಡುತ್ತಿರುವುದರ ಹಿಂದಿನ ರಾಜಕಾರಣವನ್ನು ಪರಿಶಿಷ್ಟರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿರುವ ಅವರು, ಪರಿಶಿಷ್ಟರ ಪರ ಕಾಳಜಿ ಇದ್ದರೆ ಆ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರು ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ವಾಪಸ್ ಪಡೆಯಲು ಒತ್ತಡ ಹಾಕಬೇಕು. ಇಲ್ಲವೇ ಸ್ವಾಭಿಮಾನ ಇದ್ದರೆ ಕಾಂಗ್ರೆಸ್ ತೊರೆಯಬೇಕು ಎಂದು ಹೇಳಿದ್ದಾರೆ.

    ಪರಿಶಿಷ್ಟರ ಕಲ್ಯಾಣ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನ ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಜಿಲ್ಲಾ ಬಿಜೆಪಿ ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.

    District BJP demands to drop decision to transfer welfare grants to Scheduled Castes