Category: ಕ್ರೈಂ

  • ಕಾಡಾನೆ ದಾಳಿಗೆ ಸಿಕ್ಕಿ ಇಬ್ಬರು ರೈತರು ಸ್ಥಳದಲ್ಲೇ ಸಾವು

    ಕಾಡಾನೆ ದಾಳಿಗೆ ಸಿಕ್ಕಿ ಇಬ್ಬರು ರೈತರು ಸ್ಥಳದಲ್ಲೇ ಸಾವು

    ಶೃಂಗೇರಿ: ತಾಲ್ಲೂಕಿನ ಕೆರೆಕಟ್ಟೆ ಸಮೀಪ ಬಳಿ ಅರಣ್ಯಕ್ಕೆ ಸೊಪ್ಪು ತರಲು ಹೋಗಿದ್ದ ಇಬ್ಬರು ಕಾಡಾನೆ ದಾಳಿಗೆ ಸಿಕ್ಕಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಕೆರೆಕಟ್ಟೆ ಸಮೀಪದ ಕೆರೆಗದ್ದೆಯ ಉಮೇಶ್ ಗೌಡ (54) ಮತ್ತ ಹರೀಶ್ ಶೆಟ್ಟಿ (53) ಮೃತಪಟ್ಟವರು. ಹರೀಶ್ ಅವರು ಬಿಜೆಪಿ ಶಕ್ತಿ ಕೇಂದ್ರದ ಕೆರೆಕಟ್ಟೆ ಭಾಗದ ಅಧ್ಯಕ್ಷರಾಗಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಂತೆ ಇವರ ಮನೆಗಳಿದ್ದು, ಕಾಡಿಗೆ ಸೊಪ್ಪು ತರಲು ಹೋದಾಗ ಅವಘಡ ಸಂಭವಿಸಿದೆ.

    ಇಬ್ಬರು ಮೃತಪಟ್ಟಿರುವ ವಿಷಯ ತಿಳಿದಂತೆ, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶೃಂಗೇರಿ–ಕಾರ್ಕಳ ನಡುವೆ ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಿದರು. ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ಸ್ಥಳಕ್ಕೆ ಬಂದು ಪ್ರತಿಭಟನಕಾರರ ಮನವೊಲಿಸಲು ಮುಂದಾದರು.

    ಆದರೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಳಕ್ಕೆ ಬರಬೇಕು. ಮೃತರ ಕುಟುಂಬಕ್ಕೆ ತಲಾ ₹50 ಲಕ್ಷ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಬೆಳಿಗ್ಗೆಯಿಂದ ಸಂಜೆ ತನಕ ವಾಹನ ಸವಾರರು ಪರದಾಡಿದರು. ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹20 ಲಕ್ಷ, ಶಾಸಕರು ಹಾಗೂ ಸ್ಥಳೀಯರ ನೆರವಿನಿಂದ ತಲಾ ₹5 ಲಕ್ಷ ಪರಿಹಾರ ನೀಡಲು ನಿರ್ಧರಿಸ ಲಾಯಿತು. ಬಳಿಕ ಸ್ಥಳೀಯರು ಪ್ರತಿಭಟನೆ ಹಿಂಪಡೆದರು.

    Two farmers die on the spot after being attacked by a wild elephant

  • ಎ.ಸಿ ಬಸ್‌ ಬೆಂಕಿ ಹೊತ್ತಿ ಉರಿದು 20 ಮಂದಿ ಸಜೀವ ದಹನ

    ಎ.ಸಿ ಬಸ್‌ ಬೆಂಕಿ ಹೊತ್ತಿ ಉರಿದು 20 ಮಂದಿ ಸಜೀವ ದಹನ

    ಕರ್ನೂಲು: ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎ.ಸಿ ಬಸ್‌ವೊಂದು ಅಪಘಾತದಲ್ಲಿ ಬೆಂಕಿ ಹೊತ್ತಿ ಉರಿದಿದ್ದರಿಂದ 20 ಮಂದಿ ಸಜೀವ ದಹನಗೊಂಡ ಘಟನೆ ಜಿಲ್ಲೆಯ ಚಿನ್ನತೇಕೂರು ಗ್ರಾಮದ ಬಳಿ ಶುಕ್ರವಾರ ನಡೆದಿದೆ.

    ಮುಂದಿದ್ದ ಬೈಕ್‌ಅನ್ನು ಹಿಂದಿಕ್ಕಲು ಚಾಲಕ ಯತ್ನಿಸಿದಾಗ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿದ್ದವರ ಪೈಕಿ 19 ಪ್ರಯಾಣಿಕರು ಸಜೀವ ದಹನಗೊಂಡರೆ, ಘಟನೆಯಲ್ಲಿ ಬೈಕ್‌ ಸವಾರ ಕೂಡ ಮೃತಪಟ್ಟಿದ್ದಾರೆ.

    ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೀಪಾವಳಿಗಾಗಿ ಹೈದರಾಬಾದ್‌ ಹಾಗೂ ಇತರ ಸ್ಥಳಗಳಿಗೆ ತೆರಳಿದ್ದವರು, ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದರು.

    ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಮೃತರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದ್ದು, ವಿಧಿವಿಜ್ಞಾನ ತಜ್ಞರ ತಂಡವೊಂದು ಘಟನಾ ಸ್ಥಳಕ್ಕೆ ತೆರಳಿ ಮಾದರಿಗಳನ್ನು ಸಂಗ್ರಹಿಸಿದೆ.  ಶುಕ್ರವಾರ ಬೆಳಗಿನ ಜಾವ ಈ ಅವಘಡ ಸಂಭವಿಸಿದೆ. ಆಗ ಪ್ರಯಾಣಿಕರು ಗಾಢನಿದ್ರೆಯಲ್ಲಿ ಇದ್ದರು. ಹೀಗಾಗಿ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗಲು ಇದು ಕೂಡ ಒಂದು ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಹ ದುರ್ಘಟನೆ ಕುರಿತು ದುಃಖ ವ್ಯಕ್ತಪಡಿಸಿದ್ದಾರೆ.

    20 people burnt alive in AC bus fire

     

  • ಪ್ರಿಯಾಂಕ್‌ಗೆ ಬೆದರಿಕೆ: ಆರೋಪಿ ಸೆರೆ

    ಪ್ರಿಯಾಂಕ್‌ಗೆ ಬೆದರಿಕೆ: ಆರೋಪಿ ಸೆರೆ

    ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು  ಕಲಬುರಗಿ ಹಾಗೂ ಬೆಂಗಳೂರಿನ‌ ಸದಾಶಿವನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಿದ್ದಾರೆ.

    ಮಹಾರಾಷ್ಟ್ರದ ಸೊಲ್ಲಾಪುರದ ದಾನಪ್ಪ ಶ್ರೀಶೈಲ ನರೋಣೆ ಅಲಿಯಾಸ್ ದಾನೇಶ್ (40) ಬಂಧಿತ ಆರೋಪಿ.

    ‘ಆರೋಪಿಯನ್ನು ಲಾತೂರ್‌ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಳ್ಳಲಾಗುವುದು. ಆರೋಪಿ ಚಾಕೊಲೇಟ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ದಾನಪ್ಪ ಅವರು ತಲೆಮರೆಸಿಕೊಂಡಿದ್ದರು. ಮೊಬೈಲ್‌ ಲೊಕೇಶನ್ ಆಧರಿಸಿ ಆರೋಪಿಯಿದ್ದ ಸ್ಥಳವನ್ನು ಪತ್ತೆಹಚ್ಚಿ ಬಂಧಿಸಲಾಯಿತು’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

    ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ‌ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ವಿಚಾರವಾಗಿ ದಾನಪ್ಪ ಅವರು ಸಚಿವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದರು.

    Threat to Priyank: Accused arrested

  • ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸೇರಿದ  44 ಕೆಜಿ ಚಿನ್ನ ವಶ

    ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸೇರಿದ 44 ಕೆಜಿ ಚಿನ್ನ ವಶ

    ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನ  ಈಗಾಗಲೇ ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಆ ಮೂಲಕ ಈವರೆಗೆ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

     

    ಇತ್ತೀಚೆಗೆ ಆನ್​ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಂಶಯದಡಿ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ ನಡೆದಿತ್ತು. ಸುಮಾರು 30 ಕಡೆ ನಡೆದ ದಾಳಿಯಲ್ಲಿ 12 ಕೋಟಿ ರೂ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

    ಸಿಕ್ಕಿಂನ ಗ್ಯಾಂಗ್ಟಕ್​​ನಲ್ಲಿದ್ದ ಪಪ್ಪಿಯನ್ನ ಕೊಲ್ಕತ್ತಾ ಇಡಿ ಅಧಿಕಾರಿಗಳ ಮೂಲಕ ಬಂಧಿಸಿ, ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ಕೋರಮಂಗಲದ ಜಡ್ಜ್​ ನಿವಾಸದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 35 ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶರು 5 ದಿನಗಳ ಕಾಲ ವೀರೇಂದ್ರ ಪಪ್ಪಿಯನ್ನ ಇಡಿ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಆಗಸ್ಟ್ 28 ರವರೆಗೆ ಇಡಿಯಿಂದ ವೀರೇಂದ್ರ ಪಪ್ಪಿ ವಿಚಾರಣೆ ನಡೆದಿತ್ತು. ಆಗಸ್ಟ್​ 28 ರಂದು ಪಪ್ಪಿ ಪರ ವಕೀಲರು ಬೇಲ್​ಗೆ ಅರ್ಜಿ ಸಲ್ಲಿಸಿದ್ದರು.

    ED seizes 44 kg gold belonging to Congress MLA Veerendra Pappi

  • ಅಲೆಮಾರಿ ಬಾಲಕಿ ಮೇಲೆ ಅತ್ಯಾಚಾರ-ಕೊಲೆ

    ಅಲೆಮಾರಿ ಬಾಲಕಿ ಮೇಲೆ ಅತ್ಯಾಚಾರ-ಕೊಲೆ

    ಮೈಸೂರು,: ಮೈಸೂರಿನಲ್ಲಿ  ಬಾಲಕಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ.

    ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ  ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಆದ್ರೆ, ನಿನ್ನೆ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.

    ಕೊಳ್ಳೇಗಾಲದಲ್ಲಿ ಸಿಕ್ಕ ಕಾರ್ತಿಕ್​ ಮೇಟಗಳ್ಳಿ ಬಳಿ  ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸದ್ಯ ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದುಕೊಂಡರು.

    Rape-murder of vagabond girl

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ₹8 ಕೋಟಿ ದರೋಡೆ

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ₹8 ಕೋಟಿ ದರೋಡೆ

    ವಿಜಯಪುರ: ಮಹಾರಾಷ್ಟ್ರ ಗಡಿಗೆ ಹೊಂದಿ ಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ಸುಮಾರು ₹‌8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣ ದರೋಡೆ ಮಾಡಲಾಗಿದೆ.

    ಮಂಗಳವಾರ ಸಂಜೆ 7 ಗಂಟೆಗೆ ನುಗ್ಗಿರುವ ಏಳೆಂಟು ಮುಸುಕುಧಾರಿ ದರೋಡೆಕೋರರು ಪಿಸ್ತೂಲ್‌, ಮಾರಕಾಸ್ತ್ರಗಳನ್ನು ತೋರಿಸಿ, ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೃತ್ಯ ಎಸಗಿದ್ದಾರೆ. ‘₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ’ ಎಂದು ಬ್ಯಾಂಕ್‌ ಸಿಬ್ಬಂದಿ, ಪೊಲೀಸರು ತಿಳಿಸಿದ್ದಾರೆ.

    ‘ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಎಸ್‌ಬಿಐ ಶಾಖೆಯ ಸಿಬ್ಬಂದಿ ಕೆಲಸ ಮುಗಿಸುತ್ತಿದ್ದಂತೆ ದರೋಡೆಕೋರರು ಮುಖ್ಯ ದ್ವಾರದ ಮೂಲಕ ಒಳಗಡೆ ನುಗ್ಗಿದ್ದಾರೆ.

    ‘ನಾಡ ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ, ಬ್ಯಾಂಕ್ ವ್ಯವಸ್ಥಾಪಕ ಮತ್ತು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ, ದರೋಡೆ ಮಾಡಿದ್ದಾರೆ. ನಗದು, ಆಭರಣ ಹೇರಿಕೊಂಡು ಮಹಾರಾಷ್ಟ್ರ ಮಾರ್ಗದಲ್ಲಿ ಪರಾರಿಯಾಗಿದ್ದಾರೆ’ ಎಂದು ಮಾಹಿತಿ ಆಧರಿಸಿ ಪೊಲೀಸರು ತಿಳಿಸಿದ್ದಾರೆ.

    ಕಾರು ಅಪಘಾತ: ದರೋಡೆಕೋರರು ಪರಾರಿಯಾಗುವ ವೇಳೆ ಮಹಾರಾಷ್ಟ್ರದ ಹುಲಜಂತಿ ಬಳಿ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಜನರು ಅಡ್ಡಗಟ್ಟಿದಾಗ ಸ್ಥಳದಲ್ಲೇ ಕಾರು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ಜನರು ಕಾರಿನಲ್ಲಿ ಇದ್ದ ಬಂಗಾರ ಮತ್ತು ಹಣವನ್ನು ಕೈಗೆ ಸಿಕ್ಕಷ್ಟು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ₹8 crore robbery from State Bank of India branch

  • ನಟ ದರ್ಶನ್‌ ಮೆಂಟ್‌ನ ಫ್ಲ್ಯಾಟ್‌ನಲ್ಲಿ ಕಳ್ಳತನ

    ನಟ ದರ್ಶನ್‌ ಮೆಂಟ್‌ನ ಫ್ಲ್ಯಾಟ್‌ನಲ್ಲಿ ಕಳ್ಳತನ

    ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರ ಬನಶಂಕರಿ ಮೂರನೇ ಹಂತದ ಹೊಸಕೆರೆ ಹಳ್ಳಿಯ ಪ್ರೆಸ್ಟೀಜ್‌ ಸೌತ್‌ ರಿಡ್ಜ್‌ ಅಪಾರ್ಟ್‌ ಮೆಂಟ್‌ನ ಫ್ಲ್ಯಾಟ್‌ನಲ್ಲಿ ಕಳ್ಳತನ ನಡೆದಿದ್ದು, ಈ ಸಂಬಂಧ ಚನ್ನಮ್ಮನಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಿಜಯಲಕ್ಷ್ಮಿ ಅವರ ವ್ಯವಸ್ಥಾಪಕ ನಾಗರಾಜ್ ನೀಡಿರುವ ದೂರು ಆಧರಿಸಿ, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 306ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

    ₹3 ಲಕ್ಷ ನಗದು ಕಳ್ಳತನವಾಗಿದೆ ಎಂದು ದೂರು ನೀಡಲಾಗಿದೆ. ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಲಸದವರನ್ನು ಕರೆಸಿ, ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.

    ‘ಹತ್ತು ವರ್ಷಗಳಿಂದ ವಿಜಯಲಕ್ಷ್ಮಿ ಅವರ ಮನೆಯಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದೇನೆ. ಸೆ.4ರಂದು ವಿಜಯಲಕ್ಷ್ಮಿ ಅವರು ಕರೆದು ಬೆಡ್‌ ರೂಮ್‌ನ ಕಾಟನ್‌ ಬಾಕ್ಸ್‌ನಲ್ಲಿ ಹಣವಿದೆ. ಅದನ್ನು ತೆಗೆದುಕೊಂಡು ಬರುವಂತೆ ಸೂಚಿಸಿದ್ದರು. ಅವರು ಹೇಳಿದಷ್ಟು ಹಣ ತೆಗೆದುಕೊಂಡು ಉಳಿದ ಹಣವನ್ನೇ ಅಲ್ಲೇ ಬಿಟ್ಟು ಬಂದಿದ್ದೆ. ಆ ಹಣವನ್ನು ತೆಗೆದುಕೊಂಡು ವಿಜಯಲಕ್ಷ್ಮಿ ಅವರು ಮೈಸೂರಿಗೆ ತೆರಳಿದ್ದರು.

    ಮನೆಯ ಬಾಗಿಲಿಗೆ ಬೀಗ ಹಾಕಿ ಕೀ ನನಗೆ ಕೊಟ್ಟು ಹೋಗಿದ್ದರು. ವಿಜಯಲಕ್ಷ್ಮಿ ಅವರ ತಾಯಿಗೆ ಮನೆ ಕೀ ಕೊಟ್ಟು ನಾನೂ ಹೊರಗೆ ಹೋಗಿದ್ದೆ. ಸೆ.5ರಂದು ನಾನೂ ಮೈಸೂರಿಗೆ ತೆರಳಿ, ಸೆ.7ರಂದು ವಿಜಯಲಕ್ಷ್ಮಿ ಅವರನ್ನು ಕರೆದುಕೊಂಡು ಬಂದು ಹೊಸಕೆರೆಹಳ್ಳಿಯಲ್ಲಿ ಇರುವ ಅವರ ಫ್ಲ್ಯಾಟ್‌ಗೆ ಬಿಟ್ಟು ನನ್ನ ಮನೆಗೆ ತೆರಳಿದ್ದೆ.

    ಮರು ದಿನ ವಿಜಯಲಕ್ಷ್ಮಿ ಅವರು ಕರೆ ಮಾಡಿ ರೂಮ್‌ನಲ್ಲಿದ್ದ ಹಣ ಕಾಣಿಸುತ್ತಿಲ್ಲ ಎಂಬುದಾಗಿ ತಿಳಿಸಿದ್ದರು’ ಎಂದು ನಾಗರಾಜ್‌ ಅವರು ನೀಡಿರುವ ದೂರು ಆಧರಿಸಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

    Theft at actor Darshan’s flat

  • ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ಡಿಕ್ಕಿ-9 ಮಂದಿ ಮೃತ

    ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ಡಿಕ್ಕಿ-9 ಮಂದಿ ಮೃತ

    ಹಾಸನ: ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿದ್ದು, 8 ಮಂದಿ ಮೃತ ಪಟ್ಟಿದ್ದಾರೆ. ‘25ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ‘ಮೃತರ ಸಂಖ್ಯೆ ಹೆಚ್ಚಾಗಬಹುದು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಮೆರವಣಿಗೆ ಸಾಗುತ್ತಿರುವಾಗ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್‌ಗೆ ಅಡ್ಡ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿದ ಕ್ಯಾಂಟರ್‌, ಮೆರವಣಿಗೆ ಮೇಲೆ ಎರಗಿ ಅಪಘಾತವಾಗಿದೆ.

    ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರ ಸ್ಥಿತಿ ಗಂ‌ಭೀರವಾಗಿದೆ. ಅಪಘಾತದಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಅಪಘಾತದಿಂದಾಗಿ ಸ್ಥಳದಲ್ಲಿ ಗೊಂದಲ ಏರ್ಪಟ್ಟಿತ್ತು.

    ಸ್ಥಳಕ್ಕೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ‌್ ಮಾತನಾಡಿ, ‘ಇದೊಂದು ದುರದೃಷ್ಟಕರ ಘಟನೆ. ನಡೆಯಬಾರದಿತ್ತು. ಸೂಕ್ತ ತನಿಖೆಯ ನಂತರ ಸ್ಪಷ್ಟ ಕಾರಣ ತಿಳಿಯಲಿದೆ’ ಎಂದರು.

    ಮೃತರ ಕುಟುಂಬ ಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ಪ್ರಕಟಿಸಿ ದ್ದಾರೆ. ‘ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾಕುಮಾರಿ, ಎಸ್‌ಪಿ ಮೊಹಮ್ಮದ್‌ ಸುಜೀತಾ ಭೇಟಿ ನೀಡಿದ್ದಾರೆ. ಕ್ಯಾಂಟರ್‌ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    Canter hits Ganesh immersion procession, 9 dead

  • ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ ವಶ

    ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ ವಶ

    ಚಿಕ್ಕಮಗಳೂರು: ಮನೆಗಳ್ಳತನ ಪ್ರಕರಣದಲ್ಲಿ ಮೂವರು ನೇಪಾಳಿ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಬಂದಿತರಿಂದ ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ & ಕೃತ್ಯಕ್ಕೆ ಬಳಸಿದ ಎರಡು ಕಾರು ಸೇರಿದಂತೆ ಅಂದಾಜು ಒಟ್ಟು 1,75,00000 ರೂ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಅ. ರಂದು ಬೆಳಗಿನ ಜಾವ 02.55ರ ಗಂಟೆ ಸುಮಾರಿಗೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರಂದೂರು ಗ್ರಾಮದ ಮಣಿಪುರ ಎಸ್ಟೇಟ್‌ನ ಮಾಲೀಕ ಎಚ್ .ಜಿ. ವೆಂಕಟೇಶ್ ಮನೆಯಲ್ಲಿ 6 ಲಕ್ಷ ನಗದು ಮತ್ತು 37,50,000- ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದರು.
    ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಟಿ.ಜಯಕುಮಾರ್ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡ ರಚನೆ ಮಾಡಿದ್ದು ಮಹಾರಾಷ್ಟ್ರಪೊಲೀಸರ ಸಹಕಾರದೊಂದಿಗೆ ಸಾಂಗ್ಲಿಯಲ್ಲಿ ಮೂವರು ಆರೋಪಿ ಗಳನ್ನು ಬಂಧಿಸಲಾಗಿದೆ.

    ನೇಪಾಳದ ರಾಜ್ಯದ ರಾಜೇಂದ್ರ, ಏಕೇಂದ್ರ ಕುಟಲ್ ಬದ್ವಾಲ್ ,ಕರಂ ಸಿಂಗ್ ಬಹಾದ್ದೂರ್ ಇವರನ್ನು ವಶಕ್ಕೆ ಪಡೆದು ಆರೋಪಿಗಳಿಂದ ಅಂದಾಜು 1,50,00,000 ಮೌಲ್ಯದ 1 ಕೆಜಿ 800 ಗ್ರಾಂ.ತೂಕದ ಚಿನ್ನ, 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ (ಎರಡು ಕಾರುಗಳ ಬೆಲೆ 25,00,000 ಆಗಿದ್ದು )ಅಂದಾಜು ಒಟ್ಟು 1.75.00,000 ರೂ ಮೌಲ್ಯದ ಸ್ವತ್ತುಗಳನ್ನು ವಶಕ್ಕೆಪ ಪಡೆಯಲಾಗಿದೆ.

    Gold ornaments worth one and a half crores seized

  • ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ 15 ಸಾವಿರ ರೂ ದಂಡ ವಸೂಲಿ

    ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ 15 ಸಾವಿರ ರೂ ದಂಡ ವಸೂಲಿ

    ಚಿಕ್ಕಮಗಳೂರು:  ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರಸಭೆ ಗುರಿ ಹೊಂದಿದ್ದು, ಅದರಂತೆ ಅಧಿಕಾರಿ ಸಿಬ್ಬಂದಿಗಳು ಉತ್ತಮ ಕೆಲಸ ಮಾಡುತ್ತಿದ್ದು, ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ ಸುಮಾರು ೧೫ ಸಾವಿರ ರೂ ದಂಡ ವಸೂಲಿ ಮಾಡಲಾಗಿದೆ ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು.

    ಅವರು ಇಂದು ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆಯ ಮೂಲಕ ವರ್ತಕರಿಗೆ ಎಚ್ಚರಿಕೆ ನೀಡಿ ಮಾತನಾಡಿ ನಗರದ ವರ್ತಕರಿಗೆ ಇದು ಸರಿಯಾದ ಪಾಠವಾಗಿದ್ದು, ಮುಂದೆ ಯಾರೂ ಈ ತಪ್ಪು ಮಾಡಬಾರದು, ಪ್ಲಾಸ್ಟಿಕ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ವರ್ತಕರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿರುವುದಾಗಿ ಹೇಳಿದರು.

    ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರದ ದೇವಿಸ್ಟೋರ್ ಸೇರಿದಂತೆ ಇನ್ನಿತರೆ ಅಂಗಡಿಗಳಲ್ಲಿ ನಗರಸಭೆ ನೀಡಿರುವ ಸೂಚನೆಗಳನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ೩೦೦ ಕೆ.ಜಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ೧೫ ಸಾವಿರ ರೂ ದಂಡ ವಿಧಿಸಲಾಗಿದೆ ಎಂದರು.

    ನಗರದ ವರ್ತಕರು ಮುಂದೆ ಇದೇ ರೀತಿಯ ತಪ್ಪು ಮಾಡಿದರೆ ನಗರಸಭೆಯಿಂದ ನೀಡಿರುವ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ, ಶಾಶ್ವತವಾಗಿ ಅಂಗಡಿಯನ್ನು ಮುಚ್ಚಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

    ಕಲ್ಯಾಣ ಮಂಟಪ, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ನಗರಸಭೆಯಲ್ಲಿ ಸಭೆ ನಡೆಸಿ ಸೂಕ್ತ ಎಚ್ಚರಿಕೆ ನೀಡಿದ್ದರೂ ಸೂಚನೆಗಳನ್ನು ಪಾಲನೆ ಮಾಡದೆ ಪ್ಲಾಸ್ಟಿಕ್ ಮಾರಾಟಕ್ಕೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವುದಾಗಿ ಹೇಳಿದರು.

    ಹೊರ ಜಿಲ್ಲೆಗಳಿಂದ ಲಾರಿಗಳಲ್ಲಿ ಪ್ಲಾಸ್ಟಿಕ್ ನಗರಕ್ಕೆ ಬರುತ್ತಿದ್ದು, ತಪಾಸಣೆ ನಡೆಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಳ್ಳಲು ಈಗಾಗಲೇ ಪೊಲೀಸ್ ಮತ್ತು ನಗರಸಭೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.

    ನಗರಸಭೆ ಸದಸ್ಯ ಎ.ಸಿ. ಕುಮಾರಗೌಡ ಮಾತನಾಡಿ, ನಗರವನ್ನು ಕಸಮುಕ್ತ, ಪ್ಲಾಸ್ಟಿಕ್ ಮುಕ್ತವಾಗಿಸಬೇಕೆಂದು ನಗರಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ನಗರಸಭಾಧ್ಯಕ್ಷರು, ಪೌರಾಯುಕ್ತರು ಸಿಬ್ಬಂದಿ ಜೊತೆಗೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ ಎಂದರು.

    ಮಹಾವೀರ್ ಟ್ರೇಡಿಂಗ್ ಕಂಪನಿಗೆ ೫ ಸಾವಿರ ರೂ, ವರ್ಧಮಾನ್ ದಿನಸಿ ಅಂಗಡಿಗೆ ೨ ಸಾವಿರ ರೂ, ದೇವಿ ಪ್ಲಾಸ್ಟಿಕ್ ಅಂಗಡಿಗೆ ೩ ಸಾವಿರ ರೂ, ಪುಷ್ಪ ಪೇಪರ್ ಮಾರ್ಟ್‌ಗೆ ೫ ಸಾವಿರ ರೂ ದಂಡ ವಿಧಿಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ಪರಿಸರ ಅಭಿಯಂತರರಾದ ತೇಜಸ್ವಿನಿ, ನಗರಸಭೆ ಸದಸ್ಯರುಗಳಾದ ಸೈಯದ್ ಜಾವಿದ್, ಅಮೃತೇಶ್ ಚನ್ನಕೇಶವ, ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ಉಪಸ್ಥಿತರಿದ್ದರು.

    Rs 15000 fine collected from traders selling plastic