ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್ ನಲ್ಲಿ ಆಯೋಜಿಸಲಾಗಿದ್ದ Darul Quran Campas ಅನ್ನು ಉದ್ಘಾಟಿಸಿ ಮಾತನಾಡಿದರು.
ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ, ಪ್ರತಿಯೊಬ್ಬರಿಗೂ ವಿದ್ಯೆ ಮುಖ್ಯ. ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಅತ್ಯಂತ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗಲು ಶಿಕ್ಷಣ ಅಗತ್ಯವೆಂದು ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು. ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಶಿಕ್ಷಿತರಾಗಲೇಬೇಕು. ಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು. ಅಲ್ಲದೇ ವಸತಿ ಶಾಲೆಗಳನ್ನು ಸ್ಥಾಪಿಸಿ ಮುಸಲ್ಮಾನ ಬಂಧುಗಳಿಗೆ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಿಕ್ಷಣಕ್ಕೂ ಅನುಕೂಲವಾಗಲಿದೆ ಎಂದರು.
ತಮ್ಮ ಧರ್ಮವನ್ನು ಪಾಲಿಸುತ್ತಾ ಪರ ಧರ್ಮವನ್ನು ಗೌರವಿಸಬೇಕು, ಸಹಬಾಳ್ವೆ, ಸೌಹಾರ್ದತೆಯನ್ನು ಪಾಲಿಸಬೇಕು ಎಂದು ನಮ್ಮ ಸಂವಿಧಾನ ತಿಳಿಸುತ್ತದೆ. ಯಾವುದೇ ಧರ್ಮ ದ್ವೇಷವನ್ನು ಪ್ರಚೋದಿಸುವುದಿಲ್ಲ. ದ್ವೇಷರಾಜಕಾರಣ ಮಾಡಬಾರದು. ದ್ವೇಷದಿಂದ ಯಾರ ಮನಸ್ಸನ್ನೂ ಗೆಲ್ಲಲು ಸಾಧ್ಯವಿಲ್ಲ.ಈ ಅರಿವಿಗೆ ಶಿಕ್ಷಣ ಮುಖ್ಯ. ಅಂಬೇಡ್ಕರ್ ಅವರು ತಿಳಿಸಿದಂತೆ, ಸಾಮಾಜಿಕ ಅಸಮಾನತೆ ಹೋಗಲಾಡಿಸಬೇಕು ಎಂದರು.
ಸಮಾನ ಅವಕಾಶಗಳನ್ನು ಒದಗಿಸುವ ಪ್ರಯತ್ನ ಮಾಡಬೇಕು. ಸ್ವಾತಂತ್ರ್ಯ ರಕ್ಷಣೆ ಮಾಡಲು ಅಸಮಾನತೆ ತೆಗೆದುಹಾಕಬೇಕು. ಅಸಮಾನತೆ ತೆಗೆದು ಹಾಕದಿದ್ದರೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದಿಲ್ಲ. ಶಿಕ್ಷಣದಿಂದ ಮಾತ್ರ ಸಮಾನತೆ ತರಲು, ಜ್ಞಾನ, ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಸಾಮಾಜಿಕ ಗೌರವ ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಂಘ ಸಂಸ್ಥೆಗಳು, ಸರ್ಕಾರದ ಸಂಸ್ಥೆಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟು ಕೆಲಸ ಮಾಡಬೇಕು. ನಮ್ಮ ಸರ್ಕಾರದ 4900 ಕೋಟಿ ಬಜೆಟ್ ನಲ್ಲಿ ಹೆಚ್ಚು ಮೊತ್ತವನ್ನು ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.
ಅಜೀಂ ಪ್ರೇಂ ಜಿ ಅವರ ವಿಪ್ರೋ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಲ್ಲದೇ ರಾಗಿ ಮಾಲ್ಟ್ , ಹಾಲು, ಬಿಸಿಯೂಟ ಒದಗಿಸಲಾಗುತ್ತಿದೆ ಎಂದರು. ಕಾಲೇಜಿನಲ್ಲಿ ಓದುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಅಜೀಂ ಪ್ರೇಂ ಜಿ ಅವರೂ ಇದಕ್ಕೆ ಕೈಜೋಡಿಸುತ್ತಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.
ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಸೀಮಿತವಾಗಿದೆ. ಇತ್ತೀಚೆಗೆ ಮುಸಲ್ಮಾನ ಸಮುದಾಯದ ಹೆಣ್ಣು ಮಕ್ಕಳು ವಿದ್ಯಾವಂತರಾಗುತ್ತಿರುವುದು ಉತ್ತಮ ಬೆಳವಣಿಗೆ. ಹಿಂದೆ ಶೂದ್ರ ಹೆಣ್ಣುಮಕ್ಕಳಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಈಗ ಸಮಾನ ಅವಕಾಶಗಳು ಲಭ್ಯವಾಗುವಂತೆ ಮಾಡಲಾಗುತ್ತಿದೆ.
ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಈಗ ಇದನ್ನೇ ನಕಲು ಮಾಡುತ್ತಿದ್ದಾರೆ ಎಂದರು. ಅಸಮಾನತೆ ಹೋಗಬೇಕೆನ್ನುವ ಕಾರಣದಿಂದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಸಂವಿಧಾನ ಇದನ್ನೇ ಹೇಳುತ್ತದೆ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನ ತಿಳಿದವರಿಗೆ ಸಮಾಜಮುಖಿ ಕೆಲಸ ಮಾಡಲು ಸಾಧ್ಯ ಎಂದರು.
ಮಕ್ಕಳನ್ನು ಯಾವುದೇ ಕಾರಣಕ್ಕೂ ಅವಿದ್ಯಾವಂತರನ್ನಾಗಿಸಬಾರದು. ಶಿಕ್ಷಣ ಕೊಡಿಸಬೇಕು ಎಂದು ಮುಖ್ಯಮಂತಿಗಳು ಆಗ್ರಹಿಸಿದರು. ಎಲ್ಲರೂ ವಿದ್ಯಾವಂತರಾದರೆ ಭವ್ಯ ಭಾರತ ಕಟ್ಟಬಹುದು, ಸಮ ಸಮಾಜ ನಿರ್ಮಿಸಬಹುದು. ನಾವೂ ನೀವೂ ಎಲ್ಲರೂ ಮೊದಲು ಭಾರತೀಯರು.ಆಮೇಲೆ ಹಿಂದೂ, ಮುಸ್ಲಿಂ, ಕ್ರೈಸ್ತರು ಎನಿಸಿಕೊಳ್ಳುತ್ತೇವೆ. ಎಲ್ಲರೂ ಭಾರತೀಯರಾಗಿ ಭಾರತವನ್ನು ಕಟ್ಟೋಣ. ದ್ವೇಷ ಬಿಟ್ಟು ಪರಸ್ಪರ ಪ್ರೀತಿ ಮಾಡೋಣ ಎಂದು ಕರೆ ನೀಡಿದರು.
Everyone must be educated to eliminate inequality in society.







