ಬೆಂಗಳೂರು: ‘ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳಿಗೆ ನಿಷೇಧ ಹೇರುವ ಕುರಿತಂತೆ ಪರಿಶೀಲಿಸಿ, ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್ಎಸ್ಎಸ್ ನಡೆಸುವ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿಷೇಧ ಹೇರಬೇಕೆಂದು ಮುಖ್ಯಮಂತ್ರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅ. 4ರಂದು ಪತ್ರ ಬರೆದಿದ್ದರು. ಪ್ರಿಯಾಂಕ್ ಬರೆದ ಈ ಪತ್ರದ ಮೇಲೆಯೇ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.
ಆರ್ಎಸ್ಎಸ್ ಸಂಘಟನೆಗೆ ನೂರು ವರ್ಷ ತುಂಬಿದ ಸಂಭ್ರಮಾಚರಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಅದರ ಚಟುವಟಿಕೆಗೆ ಅಂಕುಶ ಹಾಕುವಂತೆ ಪ್ರಿಯಾಂಕ್ ಬರೆದ ಪತ್ರ ಮತ್ತು ಮುಖ್ಯಮಂತ್ರಿ ನೀಡಿರುವ ಸೂಚನೆ ಬಿಜೆಪಿ ನಾಯಕರನ್ನು ಕೆರಳಿಸಿದೆ.
ಪ್ರಿಯಾಂಕ್ ಬರೆದ ಪತ್ರದಲ್ಲಿ ಏನಿದೆ?: ‘ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ.’
‘ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿ ನಲ್ಲಿ ಭಾರತ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುತ್ತಿದೆ’.
‘ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳದಲ್ಲಿ ಆರ್ಎಸ್ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲ ಬಗೆಯ ಚಟುವಟಿಕೆಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಹೇಳಿದ್ದಾರೆ.
Chief Minister instructs to take necessary action against RSS activities









