ವಿಜಯಪುರ: ಮಹಾರಾಷ್ಟ್ರ ಗಡಿಗೆ ಹೊಂದಿ ಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ಸುಮಾರು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣ ದರೋಡೆ ಮಾಡಲಾಗಿದೆ.
ಮಂಗಳವಾರ ಸಂಜೆ 7 ಗಂಟೆಗೆ ನುಗ್ಗಿರುವ ಏಳೆಂಟು ಮುಸುಕುಧಾರಿ ದರೋಡೆಕೋರರು ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ, ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೃತ್ಯ ಎಸಗಿದ್ದಾರೆ. ‘₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ’ ಎಂದು ಬ್ಯಾಂಕ್ ಸಿಬ್ಬಂದಿ, ಪೊಲೀಸರು ತಿಳಿಸಿದ್ದಾರೆ.
‘ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಎಸ್ಬಿಐ ಶಾಖೆಯ ಸಿಬ್ಬಂದಿ ಕೆಲಸ ಮುಗಿಸುತ್ತಿದ್ದಂತೆ ದರೋಡೆಕೋರರು ಮುಖ್ಯ ದ್ವಾರದ ಮೂಲಕ ಒಳಗಡೆ ನುಗ್ಗಿದ್ದಾರೆ.
‘ನಾಡ ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ, ಬ್ಯಾಂಕ್ ವ್ಯವಸ್ಥಾಪಕ ಮತ್ತು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ, ದರೋಡೆ ಮಾಡಿದ್ದಾರೆ. ನಗದು, ಆಭರಣ ಹೇರಿಕೊಂಡು ಮಹಾರಾಷ್ಟ್ರ ಮಾರ್ಗದಲ್ಲಿ ಪರಾರಿಯಾಗಿದ್ದಾರೆ’ ಎಂದು ಮಾಹಿತಿ ಆಧರಿಸಿ ಪೊಲೀಸರು ತಿಳಿಸಿದ್ದಾರೆ.
ಕಾರು ಅಪಘಾತ: ದರೋಡೆಕೋರರು ಪರಾರಿಯಾಗುವ ವೇಳೆ ಮಹಾರಾಷ್ಟ್ರದ ಹುಲಜಂತಿ ಬಳಿ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಜನರು ಅಡ್ಡಗಟ್ಟಿದಾಗ ಸ್ಥಳದಲ್ಲೇ ಕಾರು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ಜನರು ಕಾರಿನಲ್ಲಿ ಇದ್ದ ಬಂಗಾರ ಮತ್ತು ಹಣವನ್ನು ಕೈಗೆ ಸಿಕ್ಕಷ್ಟು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
₹8 crore robbery from State Bank of India branch
