Tag: District BJP demands to drop decision to transfer welfare grants to Scheduled Castes

  • ಪರಿಶಿಷ್ಟರ ಕಲ್ಯಾಣ ಅನುದಾನ ವರ್ಗಾವಣೆ ಮಾಡುವ ನಿರ್ಧಾರ ಕೈ ಬಿಡುವಂತೆ ಜಿಲ್ಲಾ ಬಿಜೆಪಿ ಆಗ್ರಹ

    ಪರಿಶಿಷ್ಟರ ಕಲ್ಯಾಣ ಅನುದಾನ ವರ್ಗಾವಣೆ ಮಾಡುವ ನಿರ್ಧಾರ ಕೈ ಬಿಡುವಂತೆ ಜಿಲ್ಲಾ ಬಿಜೆಪಿ ಆಗ್ರಹ

    ಚಿಕ್ಕಮಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ ಮೀಸಲಿಟ್ಟಿದ್ದ ಅನುದಾನದಲ್ಲಿ ೧೧,೮೯೬.೮೪ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗೆ ವರ್ಗಾವಣೆ ಮಾಡಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಕೈಬಿಡಬೇಕು ಎಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ತಿಳಿಸಿದ್ದಾರೆ.

    ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಕಲ್ಯಾಣಕ್ಕಾಗಿ ಈ ಸಾಲಿನಲ್ಲಿ ತೆಗೆದಿರಿಸಿದ್ದ ೪೨,೦೧೭.೫೧ ಕೋಟಿ ರೂ.ಗಳ ಅನುದಾನದಲ್ಲಿ ೧೧,೮೯೬.೮೪ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಲು ಸರ್ಕಾರ ತೆಗೆದುಕೊಂಡಿರುವ ಕ್ರಮ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನರಿಗೆ ಮಾಡುವ ಅನ್ಯಾಯವಾಗಿದೆ. ಸರ್ಕಾರದ ಈ ಕ್ರಮವನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಅವರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ೨೦೨೩ ನೆಯ ಸಾಲಿನಲ್ಲಿ ೧೧,೧೧೪ ಕೋಟಿ ರೂ.ಗಳನ್ನು ಮತ್ತು ೨೦೨೪ ನೆಯ ಸಾಲಿನಲ್ಲಿ ೧೪,೨೮೨ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ಮೂಲಕ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಅದೇ ಚಾಳಿಯನ್ನು ಈ ಬಾರಿಯೂ ಸರ್ಕಾರ ೧೧,೮೯೬ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ಅಂತಿಮ ಆದೇಶ ಹೊರಡಿಸಲು ಸಿದ್ಧತೆ ನಡೆಸಿರುವುದು ಅವೈಜ್ಞಾನಿಕವಾಗಿದೆ ಎಂದು ಅವರು ಹೇಳಿದ್ದಾರೆ.

    ಪರಿಶಿಷ್ಟರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸರ್ವತೋಮುಖ ವಿಕಾಸಕ್ಕಾಗಿ ಮೀಸಲಿಟ್ಟಿದ್ದ ಅನುದಾನವನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವುದರೊಂದಿಗೆ ಗ್ಯಾರಂಟಿ ಅನುಷ್ಠಾನದಲ್ಲೂ ಸರ್ಕಾರ ಜಾತಿಯತೆ ಮಾಡುತ್ತಿದೆ ಎಂದು ಟೀಕಿಸಿರುವ ಅವರು, ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರಿಗೆ ಪ್ರತ್ಯೇಕ ಅನುದಾನ ಮೀಸಲಿಡುತ್ತೇವೆ ಎಂದು ಹೇಳಿರಲಿಲ್ಲ. ಆದರೆ, ಕಳೆದ ಎರಡು ವರ್ಷಗಳಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದಲ್ಲೂ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

    ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ವಾಲ್ಮಿಕಿ ಸೇರಿದಂತೆ ವಿವಿಧ ಜನಾಂಗಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡದೆ ಕೇವಲ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಮಾತ್ರ ವರ್ಗಾವಣೆ ಮಾಡುತ್ತಿರುವುದನ್ನು ಗಮನಿಸಿದಾಗ ತಾರತಮ್ಯದ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗದ ನಾಯಕರು ಅಸಹಾಯಕರಾಗಿದ್ದಾರೆ ಎಂಬುದರ ಸಂಕೇತವಾಗಿದೆ ಎಂದು ಹೇಳಿದ್ದಾರೆ.

    ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ ವೋಟಿನ ರಾಜಕಾರಣ ಮಾಡುತ್ತಿರುವುದರ ಹಿಂದಿನ ರಾಜಕಾರಣವನ್ನು ಪರಿಶಿಷ್ಟರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿರುವ ಅವರು, ಪರಿಶಿಷ್ಟರ ಪರ ಕಾಳಜಿ ಇದ್ದರೆ ಆ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರು ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ವಾಪಸ್ ಪಡೆಯಲು ಒತ್ತಡ ಹಾಕಬೇಕು. ಇಲ್ಲವೇ ಸ್ವಾಭಿಮಾನ ಇದ್ದರೆ ಕಾಂಗ್ರೆಸ್ ತೊರೆಯಬೇಕು ಎಂದು ಹೇಳಿದ್ದಾರೆ.

    ಪರಿಶಿಷ್ಟರ ಕಲ್ಯಾಣ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನ ಪಂಚ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಜಿಲ್ಲಾ ಬಿಜೆಪಿ ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.

    District BJP demands to drop decision to transfer welfare grants to Scheduled Castes